You are currently browsing the category archive for the 'ಅಂದಂದು' category.
“ಮಕ್ಕಳಿಗೆ ಧರ್ಮವನ್ನು ಬೋಧಿಸುವುದು ಚೈಲ್ಡ್ ಅಬ್ಯೂಸ್!” ಎಂದು ತುಂಬಿದ ರೈಲಿನಲ್ಲಿ ಒಬ್ಬ ತನ್ನೊಡನಿದ್ದವಳಿಗೆ ಜೋರಾಗಿ ಬೋಧಿಸಿದ. ಸುತ್ತಮುತ್ತಲಿದ್ದವರು ಸಣ್ಣಗೆ ಮಿಸುಕಾಡಿದರು. ಕೆಲವರು ಒಪ್ಪಿದವರಂತೆ ಕಂಡರೂ ಸಣ್ಣಗೆ ಗಂಟಲು ಸರಿಮಾಡಿಕೊಂಡು ಬೇರತ್ತ ತಿರುಗಿದರು. ಒಪ್ಪಿಗೆಯಾಗದವರು ಒಂದೆರಡು ಕ್ಷಣ ದುರುದುರು ಎಂದು ನೋಡಿ “ಹಾಳಾಗಿ ಹೋಗಲಿ” ಎಂಬಂತೆ ಇನ್ನೊಂದತ್ತ ತಿರುಗಿದರು.
ಜೀವ ದಿಟ ಅನಿಸಲಿಲ್ಲವೇ ನಿನಗೆ?
ದೇವ ಸುಳ್ಳು ಅನಿಸಲಿಲ್ಲವೆ ನಿನಗೆ?
ನಂಬಿಕೆಯೇ ಎಲ್ಲ ಮೀರಿದ ಸತ್ಯ ನಿನಗೆ
ಬುಡವಿಲ್ಲದಿದ್ದರೂ ಅಲ್ಲವೆ?
ಆ ರಥದಲ್ಲಿ ಕೂತ ಗೊಂಬೆಯ
ಒಳಗೇನೋ ಕಂಡಿತೆನ್ನುವ
ಕೋಟಿ ಕೋಟಿ ಜನ ಕುರುಡುರೇ?
ಅನುಮಾನ ಸಹಜ
ಇರಬಹುದು ಎಂದೇಕೆ ಅನಿಸಲಿಲ್ಲ ನಿನಗೆ?
ನಿನ್ನ ಯಾವುದೋ ತಬ್ಬಲಿತನ
ಕಳಕೊಳ್ಳುವ ತವಕದಲ್ಲಿ
ನಿನ್ನ ಮಕ್ಕಳೀಗ ತಬ್ಬಲಿ
ರಥಚಕ್ರಕ್ಕೆ ಸಿಕ್ಕಿ ಸಾಯುವ ಪುಣ್ಯವಿಲ್ಲದಿದ್ದರೆ
ರಥವೆಳೆಯುವ ಕಾಲಿಗೆ ಸಿಕ್ಕಾದರೂ ಸಾಯಬೇಕು
ಮಕ್ಕಳನ್ನು ತಬ್ಬಲಿ ಮಾಡಬೇಕು.
ಅವರು
ತಬ್ಬಲಿಯಾಗಿ ರಥವೆಳೆಯುವ ಕೈಗಳಾಗಬೇಕು
ತುಳಿದು ಕೊಲ್ಲುವ ಕಾಲುಗಳಾಗಬೇಕು
ಅಯ್ಯೋ,
ರಥಚಕ್ರ ಮಾತ್ರ ತಿರುಗುತ್ತಲೇ ಇರಬೇಕು.
ಎವಲ್ಯೂಷನ್ ಬಯಾಲಜಿಸ್ಟ್ ಆಗಿರುವ ಡಾ|| ರಿಚರ್ಡ್ ಡಾಕಿನ್ಸ್ ನಾಸ್ತಿಕರೂ ಹೌದು. ಅವರ ಪುಸ್ತಕ ಓದಿದವರಿಗೆ, ಅವರ ಮಾತುಗಳನ್ನು ಕೇಳಿದವರಿಗೆ ಅವರು ಯಾಕೆ ನಾಸ್ತಿಕರು ಮತ್ತು ಅದನ್ನು ಅವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂದು ಹೇಳಬೇಕಾಗಿಲ್ಲ.
Read the rest of this entry »
ಎಸ್.ಪಿ.ಬಾಲಸುಬ್ರಹ್ಮಣ್ಯಂ ಹಾಡುಗಾರಿಕೆಯ ಕಾರ್ಯಕ್ರಮ ಸಿಡ್ನಿಯಲ್ಲಿ ಇತ್ತೀಚೆಗೆ ನಡೆಯಿತು. ನಾನು ಹೋಗಲಿಲ್ಲ. ಹೋಗಬೇಕು ಅನಿಸಲಿಲ್ಲ.
ತುಂಬಾ ಇಂಪಾಗಿ ಹಾಡಬಲ್ಲ ಎಸ್.ಪಿಯ ಹಲವಾರು ವರ್ಷಗಳ “ಟ್ರೇನ್ಡ್” ದನಿಯಾಗಲಿ, ತೀಡಿತೀಡಿ ನುಣುಪಾದ “ಕಲ್ಚರ್ಡ್” ದನಿಯಾಗಲಿ ನನ್ನಲ್ಲಿ ಉತ್ಸಾಹ ಕೆರಳಿಸುತ್ತಿಲ್ಲ. ಒಂದು ರೀತಿಯಲ್ಲಿ ಹೇಳುವುದಾದರೆ ಇಂಡಿಯಾದ ಹಲವಾರು ಜನಪ್ರಿಯ ಹಾಡುಗಾರರ ತೊಂದರೆ ಇದು ಅನಿಸುತ್ತದೆ. ಇರಲಿ ಅದು ಮತ್ತಾವಾಗಲಾದರೂ ಬೇರೆಯಾಗಿಯೇ ಯೋಚಸಲು ಇಟ್ಟುಕೊಳ್ಳುತ್ತೇನೆ.
ನನ್ನ ಲೋಕದ ಏನೇನು ಇಲ್ಲಿ ಬರೆದುಕೊಳ್ಳುತ್ತೇನೋ ಅದರಲ್ಲಿ ಎಷ್ಟೋ ತಲುಪುತ್ತದೆ, ಮತ್ತೆಷ್ಟೋ ತಲುಪುವುದೇ ಇಲ್ಲ. ಹಂಚಿಕೊಳ್ಳುವುದು ತಲುಪಲಿಕ್ಕೇ. ಆದರೂ ಬರೆಯುವುದು ತಲುಪಲಷ್ಟೇ ಅಲ್ಲ. ಅದು ಒಂದು ಮಾತು. ಯಾವುದು ತಲುಪುತ್ತದೆ ಯಾವುದು ತಲುಪುವುದಿಲ್ಲ ಅನ್ನುವುದು ಬರೇ ಕುತೂಹಲವಷ್ಟೇ ಅಲ್ಲ. ತುಂಬಾ ಮುಖ್ಯ ಕೂಡ.
ಜಾನ್ ಲೀ ಹುಕರ್ನ ಒಂದು ಬ್ಲೂಸ್ ಪದ “ಡೀಪ್ ಬ್ಲೂ ಸೀ” ಅಂತ. “ಚಿಲ್ ಔಟ್” ಎಂಬ ಆಲ್ಬಮ್ಮಿನಲ್ಲಿದೆ.
ಹಾಡುತ್ತಿರುವವ ಇರುವ ಊರಿನಲ್ಲಿ ಮಳೆಯೋ ಮಳೆ. ಎಷ್ಟೆಂದರೆ ವಿಮಾನಗಳು ಮುಳುಗಿ ಹೋಗುವಷ್ಟು. ಅವನಿಗೋ ಮನೆಗೆ ಹೋಗಬೇಕು ಹೋಗಬೇಕೆನ್ನುವ ತೀರದ ಒದ್ದಾಟ. ಆದರೆ ಅವನಿರುವ ಊರಿನಲ್ಲಿ ವಿಮಾನ ಮುಳುಗಿ ಹೋಗುವಷ್ಟು ಮಳೆ.

ಆಳದ ನೀಲಿ ಸಾಗರದಲ್ಲೆದ್ದ ಚಂಡಮಾರುತ ಇಷ್ಟು ಮಳೆ ಸುರಿಯಬಹುದೆ ಎಂದು ನಾಯಕನಿಗೆ ಅಚ್ಚರಿ. ಏರ್ಪೋರ್ಟಿಗೆ ಫೋನ್ ಮಾಡಿದರೂ “ಇಲ್ಲಿ ತುಂಬಾ ಮಳೆ. ಮೂರುನಾಕು ದಿನ ಎಲ್ಲಿಗೂ ಹೋಗುವುದಿಲ್ಲ. ವಿಮಾನ ಮುಳುಗುವಷ್ಟು ಮಳೆ” ಎಂಬ ಉತ್ತರ.
ದೂರದ ಊರಲ್ಲಿರುವ ತನ್ನ ನಲ್ಲೆಗೆ ಫೋನ್ ಮಾಡಿ “ನನಗಾಗಿ ಅಳಬೇಡ. ಇಲ್ಲಿ ಎಡೆಬಿಡದ ಮಳೆ. ಆಳದ ನೀಲಿ ಸಾಗರದಲ್ಲಿ ಚಂಡಮಾರುತವೆದ್ದಿದೆ. ನಿನಗಾಗಿ ತಹತಹಿಸುತ್ತಾ ಇದ್ದೀನಿ” ಎಂದು ಸಮಾಧಾನದ ನುಡಿ.
ನಂತರ ವಿಮಾನದ ಕ್ಯಾಪ್ಟನ್ ಜತೆ, ಪೈಲೆಟ್ ಜತೆ ಮಾತಾಡುತ್ತಾನೆ. ಅವರೂ “ಇನ್ನು ಮೂರು ನಾಕು ದಿನ ಹೊರಡುವುದಿಲ್ಲ. ನೋಡು ಹವೆ ಎಷ್ಟು ಕೆಟ್ಟದಿದೆ. ಮಳೆ ನೋಡು, ವಿಮಾನ ಮುಳುಗವಷ್ಟು ಮಳೆ” ಎಂದು ವಿವರಣೆ ಕೊಡುತ್ತಾರೆ. Read the rest of this entry »
ಭಾನುವಾರದ ಬೆಳಗಿನ ಮೌನ ನನಗೆ ಇಷ್ಟ. ನನಗಂತೂ ಭಾನುವಾರ ಎಲ್ಲ ಜಗ್ಗಾಟದ ದಿನಗಳ ನಡುವೆ ತಣ್ಣಗೆ ತೇಲುವ ನಡುಗಡ್ಡೆ.
ಈ ಯುಗಾದಿಯ ಹೋಳಿಗೆ ಎಣ್ಣೆ ನೀರು ಸಂಭ್ರಮದಲ್ಲಿ ಜಿಂಬಾಬ್ವೆ ಜನರ ದನಿಗೆ ಬೆಲೆ ಸಿಗಬಹುದು, ಅವರಿಗೊಂದು ಹೊಸ ಯುಗ ಶುರುವಾಗಬಹುದು ಎಂದು ಆಶಿಸುತ್ತೇನೆ.
Read the rest of this entry »
ನಮ್ಮ ಪೂರ್ವಿಕರ ಬಳುವಳಿ ಅಂತ ಮುಜುಗರದಿಂದ ಹೇಳ್ತಾರೆ, ಹಸಿರು ನೀಲಿ ಅಂತ ಕೂಡ ಹೇಳ್ತಾರೆ. ಕಂಡವರಿಗೇ ಗೊತ್ತು. ನನಗೆಲ್ಲಿ ಆ ಭಾಗ್ಯ? Read the rest of this entry »
ಈ ಆಕ್ರಮಣದ ಯುಗದಲ್ಲಿ
ನಂಬಿಕೆಯ ಗುತ್ತಿಗೆ ಹಿಡಿದ ಧಾರ್ಮಿಕ ಮೂಲಭೂತವಾದಿ
ನುಡಿಯ ಗುತ್ತಿಗೆ ಹಿಡಿದ ಭಾಷಾ ಮೂಲಭೂತವಾದಿ
Read the rest of this entry »
ಕೆಲಸದಲ್ಲಿ ಮೊನ್ನೆ ಹೊಸ ಸಾಫ್ಟ್ವೇರ್ ಬಗ್ಗೆ ಒಂದಿಬ್ಬರು ಗೊಣಗಿಕೊಳ್ಳುತ್ತಿದ್ದರು. ನಾನು ತಲೆ ತಗ್ಗಿಸಿ ನನ್ನ ಪಾಡಿಗೆ ಕಾಫಿ ಮಾಡಿಕೊಳ್ತಾ ಇದ್ದೆ. ಗೊಣಗಾಟದ ನಡುವಲ್ಲಿ ಒಬ್ಬಳು ಹೇಳಿದ್ದು Read the rest of this entry »
ಈ ವರ್ಷ ಏನೆಲ್ಲಾ ಬರೆಯಬೇಕೆಂದುಕೊಂಡಿದ್ದೆ…
ಸ್ವಾರ್ಥದ ಒಳ್ಳೆತನ ಮತ್ತು ಅಗತ್ಯ. Read the rest of this entry »
ಮೊನ್ನೆ ನಾವು ಕೆಲವರು ಹರಟೆ ಹೊಡೆದ್ದದ್ದರ ಬಗ್ಗೆ ಹೇಳ್ತಾ ಇದ್ದೀನಿ.
ಗುಂಪಾಗಿ ಕೂತಿದ್ದ ನಮ್ಮ ನಡುವೆ ಒಬ್ಬರು ಹಿರಿಯರು ಇದ್ದರು. ತುಂಬಾ ಗತ್ತಿನಿಂದ ತಮ್ಮ ಹಳ್ಳಿಯಲ್ಲಿ ಚಿಕ್ಕವರಿದ್ದಾಗ ಕೇಳಿದ ಒಂದು ಕತೆಯನ್ನು ಹೇಳಿದರು. ಆ ಕತೆ ಕೇಳಿದಾಗಿನಿಂದ ತಾವು ಪವಾಡಗಳನ್ನು ಬಲವಾಗಿ ನಂಬುತ್ತೇನೆ ಎಂದು ವಿವರಿಸಿದರು. ಆಗ ಹಿರಿಯರ ಮೇಲೆ ಅಪಾರ ಗೌರವವಿದ್ದ ಇನ್ನೊಬ್ಬರು ಶುರು ಹಚ್ಚಿಕೊಂಡರು. Read the rest of this entry »
ಹೋದ ವಾರ ಆಸ್ಟ್ರೇಲಿಯಾದಲ್ಲಿ ಚುನಾವಣೆ ಮುಗಿಯಿತು. ಸರ್ಕಾರ ಬದಲಾಯಿತು.ಅದರ ಬಗ್ಗೆ ಬರೀ ಬೇಕು ಅಂತ ಅನ್ಕೊಂಡರೂ ಆಗಲಿಲ್ಲ. ಈವತ್ತು ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿತಂತೆ.
ಹೋದ ಸರ್ಕಾರ ಬಿದ್ದಿದ್ದು, ಹೀನಾಮಾನವಾಗಿ ಸೋತಿದ್ದು ಯಾಕಿದ್ದೀತು? ಇದಕ್ಕೆಲ್ಲಾ ಏನು ಅರ್ಥ ಅಂತ ಯೋಚಿಸುತ್ತಿದ್ದೀನಿ. Read the rest of this entry »
ಇರುಳು ನಿದ್ದೆಯಲ್ಲಿ ಬರಬೇಕಾದ ಕನಸು, ಹಗಲೆಲ್ಲಾ ಜತೆಯಲ್ಲೇ ಓಡಾಡಿಕೊಂಡಿದ್ದರೆ ತುಂಬಾ ಕಷ್ಟ. ಕೆಲವು ಕಡೆಗಳಿಗೆ ಅದನ್ನು ಕರಕೊಂಡು ಹೋಗಲು ನನಗೆ ಇಷ್ಟವಿಲ್ಲ. ಅದು ಕನಸಿಗೆ ಗೊತ್ತಾಗುವುದಿಲ್ಲ. ಹೇಳಿದರೆ ಕೇಳಲು ಅದಕ್ಕೆ ಕಿವಿಯಾಗಲೀ ಮತ್ತೊಂದಾಗಲೀ ಇಲ್ಲ. Read the rest of this entry »
ಕರ್ನಾಟಕದ “ವಚನಭ್ರಷ್ಟತೆ”, “ಮಾನ-ಅವಮಾನ”, “ಗೌರವ-ಅಗೌರವ” ಗಳ ಹುಡುಗಾಟದ ಅಭದ್ರತೆಯಿಂದ ನಾನು ನೇರ ಬಂದಿಳಿದದ್ದು ಆಸ್ಟ್ರೇಲಿಯಾದ ಚುನಾವಣಾ ಪ್ರಚಾರದ ಕೂಗಾಟ, ಹಾರಾಟದ ನಡುವಿಗೆ.
Read the rest of this entry »
ಸಿಡ್ನಿಗೆ ಬಂದ ಮರುದಿನವೇ ಕೆಲಸದಲ್ಲಿ ತೊಡಗಿಕೊಂಡೆ. ಒಂದು ವಾರ ನೋಡ ನೋಡುತ್ತಲೇ ಜಾರಿ ಹೋಗಿತ್ತು. ಆದರೂ ಸಿಡ್ನಿ ತಲುಪಿದ್ದೇನೆ ಅನಿಸುತ್ತಿಲ್ಲ. ಇನ್ನೂ ಬೆಂಗಳೂರಿನಲ್ಲಿರುವಂತೇ.
೩/೧೧/೦೭ ರಾತ್ರಿ ೧೦ ಗಂಟೆ.
ಬೆಂಗಳೂರು ಏರ್ಪೋರ್ಟಿನ ವಿಧಿ ವಿಧಾನಗಳನ್ನೆಲ್ಲಾ ಮುಗಿಸಿ ಕೂತು ನಿಟ್ಟುಸಿರುಬಿಡುತ್ತೇನೆ. ಬರುತ್ತಿದ್ದಂತೆಯೇ ಹೊರಟೂ ಬಿಡುತ್ತಿದ್ದೇನೆ. ಬೆಂಗಳೂರನ್ನು ಬಿಡುತ್ತೇನೆ.
ಸಣ್ಣವನಿದ್ದಾಗಲೇ ಅಲೀಬಾಬಾ ನಾಟಕಕ್ಕೆ ನನ್ನನ್ನು ಸೇರಿಸಿಕೊಂಡು ಆಡಿಸಿದ ಪ್ರೇಮಾ ಕಾರಂತ್ ಈವತ್ತು ಕೊನೆ ಉಸಿರೆಳೆದರು… ಒಂದೆರಡು ವಾರದಿಂದ ಬಳಲುತ್ತಿದ್ದರು… ಆಸ್ಪತ್ರೆಯಲ್ಲಿದ್ದರು…
ಮೈಸೂರಿನಲ್ಲಿ ಮೊನ್ನೆ ಎಂಬತ್ತರ ಬೆಂಗಳೂರು ಧುತ್ತನೆ ಎದುರಾಯಿತು.
ಮೈಸೂರಿನ ಹೊರವಲಯದ ಬಡಾವಣೆಯಲ್ಲಿ ಇರುವ “ನಟನ” ಎಂಬ ಪುಟ್ಟ ರಂಗಮಂದಿರ. ಸ್ವಲ್ಪ ಉದ್ದವೇ ಅನಿಸಿದ ಈ ವರ್ಷದ ತಿರುಗಾಟದ ನಾಟಕ - ‘ಈ ನರಕ… ಆ ಪುಳಕ…’. ತೆರೆಗಳು, ಟಿ.ಪ್ರಸನ್ನನ ಗೃಹಸ್ಥಾಶ್ರಮ, ನನ್ನ ತಂಗಿಗೊಂದು ಗಂಡು ಕೊಡಿ, ಕ್ರಾಂತಿ ಬಂತು ಕ್ರಾಂತಿ, ಗಿಳಿಯು ಪಂಜರದೊಳ್ಳಿಲ್ಲ, ಸಿದ್ಧತೆ, ಪೋಲೀಸರಿದ್ದಾರೆ ಎಚ್ಚರಿಕೆ - ಈ ಏಳು ಲಂಕೇಶರ ನಾಟಕಗಳನ್ನು ಕೂಡಿಸಿ ರಘುನಂದನ್ ಈ ನಾಟಕವನ್ನು ರೂಪಿಸಿದ್ದಾರೆ. ಲಂಕೇಶರ ಹರಿತವಾದ ಮಾತುಗಳು, ಸಾಮಾನ್ಯ ನುಡಿಗಳಲ್ಲೇ ಕಾವ್ಯವನ್ನು ಮಿಂಚಿಸುತ್ತಾ ಗಾಢವಾಗುವುದು ತುಂಬಾ ಕುಶಿ ಕೊಟ್ಟಿತು. ನೀನಾಸಂರಿಗರ ನುಡಿರೀತಿ ಯಾಕೋ ಈ ಬಾರಿ, ಈ ನಾಟಕಕ್ಕೆ ಅತಿ ಭಾರವಾದಂತೆ ಅನಿಸಿತು. ಸುಲಭ ವಾಚನದಿಂದ ಪ್ರಭಾವ ಬೀರಬಹುದಾದ ಮಾತುಗಳು ಇಲ್ಲಿ ಹೇಳುವ ರೀತಿಯ ಒತ್ತಿನಿಂದ ಕುಂದಿದಂತೆ ಅನಿಸಿತು. ಏನೋ ಕಳಕೊಂಡಂತೆ ಅನಿಸಿತು. ಇದು ಉದ್ದೇಶಪೂರ್ಣವಿರಬಹುದೆ. ಹೌದಾದರೆ ಏತಕ್ಕಾಗಿರಬಹುದು ಎಂದು ಯೋಚಿಸಿದೆ. ಆದರೆ ಎರಡೂ ಮುಕ್ಕಾಲು ಗಂಟೆಗೂ ಮೀರಿದ ಅವಧಿಯ ಬಗ್ಗೆ ನೀನಾಸಂ ಯೋಚಿಸಿದರೆ ಒಳ್ಳೆಯದಿತ್ತು ಅನಿಸಿತು.
ಹತ್ತು ಗಂಟೆಯ ಸುಮಾರಿಗೆ ಮುಗಿದ ನಾಟಕದಿಂದ ಹೊರಬಂದೆವು. ಸಣ್ಣಕೆ ಮಳೆ ಹನಿಯ ತೊಡಗಿತು. ಜನರೆಲ್ಲಾ ಸ್ಕೂಟರ್ ಕಾರುಗಳನ್ನು ಹತ್ತಿ ಕತ್ತಲಲ್ಲಿ ಕರಗಿಹೋಗುತ್ತಿದ್ದರು. ಆಟೋ ಹಿಡಿಯಲು ದೂರದಲ್ಲಿದ್ದ ಮುಖ್ಯ ಬೀದಿಗೆ ಬಂದೆವು. ಯಾರೂ ಓಡಾಡದ ದೊಡ್ಡ ಬೀದಿ. ಇರುಳಲ್ಲಿ ಅಲ್ಲಲ್ಲಿ ಉರಿಯುತ್ತಿದ್ದ ದೀಪಗಳು. ಆಗೊಂದು ಈಗೊಂದು ಓಡಾಡುತ್ತಿದ್ದ ವಾಹನಗಳು. ಆದರೆ ಆಟೋಗಳು ಮಾತ್ರ ಒಂದೂ ಇಲ್ಲ. ದಿಕ್ಕು ತಪ್ಪಿದವರಂತೆ ಅತ್ತಿತ್ತ ಓಡಾಡುತ್ತಿದ್ದಾಗ ಇದ್ದಕಿದ್ದ ಹಾಗೆ ಧೋ ಎಂದು ಸುರಿದ ಮಳೆ. ದೂರದಲ್ಲಿ ಕಾಣುತ್ತಿದ್ದ ಮುಚ್ಚಿದ ಅಂಗಡಿಗೆ ಓಟ. ಅದರ ಮುಂದಿನ ಛಾವಣಿಯಡಿ ಸ್ವಲ್ಪ ಸುಧಾರಿಸಿಕೊಂಡೆವು. ಮುಂದೇನು ಎಂದು ಹೊಳೆಯಲಿಲ್ಲ. ರಂಗಮಂದಿರದ ಕಡೆಯಿಂದಲೇ ತೆವಳುತ್ತಾ ಬರುತ್ತಿದ್ದ ಕಾರಿಗೆ ಅಡ್ಡಹಾಕಿದೆ. ಬೆಳಿಗ್ಗೆ ಸಿಕ್ಕಿದ್ದ ಗೆಳೆಯ ಅದರಲ್ಲಿದ್ದರು. ತುಂಬಿಕೊಂಡಿದ್ದ ಕಾರಿನಲ್ಲಿ ನಾವೂ ತೂರಿಕೊಂಡೆವು. ಮನೆಯ ಹತ್ತಿರ ಬಿಟ್ಟರು.
ಹತ್ತು ನಿಮಿಷದ ಹಿಂದೆ ಮಳೆಯಲ್ಲಿ ಸಿಕ್ಕಿಕೊಂಡು ಚಡಪಡಿಸಿ ದಿಕ್ಕು ತಪ್ಪಿದ್ದು. ನಿರ್ಜನ ಬೀದಿ. ಸಿಗದ ಆಟೋ. ಈಗ ಮನೆಯ ಎದುರು ಕಾರಿನಿಂದ ಇಳಿದದ್ದು. ಎಂಬತ್ತರ ಬೆಂಗಳೂರಿನ ನೆನಪು.

ಬೆಂಗಳೂರಿನಿಂದ ಮೂಡುಬಿದ್ರೆಯ ದಾರಿಯಲ್ಲಿ ತೆವಳುತ್ತಿರುವ ಬಸ್ಸು. ನಡುರಾತ್ರಿ. ಬಸ್ಸಿನ ಅಲ್ಪ ಬೆಳಕಿನಲ್ಲಿ ಸರಿದು ಹೋಗುತ್ತಿದ್ದ ಮನೆ, ಅಂಗಳ, ಹಿತ್ತಲು, ಹಾಡಿ, ಕಾಡು… ಬಸ್ಸಿನ ಕ್ಷಣಿಕ ಬೆಳಕಿನಲ್ಲಿ ತೋರಿ ಕಾಣೆಯಾಗುತ್ತಿದ್ದ ದೇವಸ್ಥಾನ, ಮಸೀದಿ, ಇಗರ್ಜಿ ಗೋಪುರಗಳು… ಮತ್ತೆ ಕತ್ತಲೆಯಲ್ಲಿ ಕಾಡು ಬೇಲಿ ಇತ್ಯಾದಿ.
ಸಣ್ಣವನಿದ್ದಾಗ ಘಾಟಿ ಇಳಿದು ಹತ್ತುವುದನ್ನು ನೋಡುವ ಕುತೂಹಲದಲ್ಲಿ ಇವೆಲ್ಲವನ್ನು ಅರ್ಧ ಮಂಪರಿನಲ್ಲಿ ನೋಡುತ್ತಾ ನಿದ್ದೆ ಹತ್ತಿಬಿಡುತ್ತಿತ್ತು. ಘಾಟಿ ಹತ್ತಿ ಇಳಿಯುವುದು ಹಲವು ಸಲ ಸಿಕ್ಕುತ್ತಿರಲಿಲ್ಲ. ಆದರೆ, ಈ ಸಲ ಹಾಗಾಗಲಿಲ್ಲ. ಜೆಟ್ಲಾಗಿನ ಅವಾಂತರದಲ್ಲಿ ಎಚ್ಚರವಿತ್ತು. ಮನಸ್ಸಿನಲ್ಲಿ ನೆನಪುಗಳು ಬೆಚ್ಚಗೆ ಅರಳುತ್ತಿದ್ದವು. ಸಣ್ಣ ಮಗುವಿನ ಹಾಗೇ ಇವನ್ನೆಲ್ಲಾ ನೋಡುತ್ತಿದ್ದೇನೆ, ಅದೇ ಮಂಪರಿನಲ್ಲಿ, ಘಾಟಿಯ ಬರುವಿಕೆಯ ಕುತೂಹಲದಲ್ಲಿ ಅನಿಸುತ್ತಿತ್ತು!
ಬಸ್ಸು ಯಾಕೋ ತುಂಬಾ ತಡವಾಗಿ ಚಾರ್ಮಾಡಿ ಘಾಟಿ ತಲುಪಿತ್ತು. ಮುಂಜಾವದ ಬೆಳಕಲ್ಲಿ ಕಾತರದ ಮನಸ್ಸನ್ನು ಚೇಡಿಸುವಂತೆ ಮೆಲ್ಲನೆ ದೂರದ ಗುಡ್ಡ ಬೆಟ್ಟ ಮೋಡ ಎಲ್ಲ ಕಾಣತೊಡಗಿತು.
ಸರಕ್ಕನೆ ಇಳಿಯಬೇಕಾದ ಘಾಟಿಯ ಇಳಿಜಾರಿನಲ್ಲಿ ಏಕಾಏಕಿ ನಿಂತುಬಿಟ್ಟ ಬಸ್ಸು. ಮುಂದೆ ಹತ್ತಾರು ಬಸ್ಸು ಲಾರಿ ವಾಹನಗಳ ಸಾಲು. ತುಂಬಾ ಇಕ್ಕಟ್ಟಾದ ದಾರಿಯಲ್ಲಿ ಮುಂದಿಂದ ಬರುವ ವಾಹನಗಳನ್ನು ಸಂಬಾಳಿಸಿಕೊಂಡು ಹೋಗಬೇಕು. ಕೆಲವು ತಿರುವುಗಳಲ್ಲಿ ಅರ್ಧ ಮುಕ್ಕಾಲು ಗಂಟೆ ನಿಂತುಬಿಡುತಿತ್ತು.
ಶಿರಾಡಿ ಘಾಟಿ ಮುಚ್ಚಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡರಷ್ಷು ಗಾಡಿಗಳು. ನಿಂತ ಬಸ್ಸಿಂದ ಇಳಿದು ಅಡ್ಡಾಡುತ್ತಾ, ಸರ್ಕಾರವನ್ನು ಬಯ್ಯುತ್ತಾ ಕಾಲದೂಡುತ್ತಿದ್ದ ಮಂದಿ. ಹೀಗೆ ಮೆಲ್ಲನೆ ತೆವಳಿ ಇಳಿಯುವಾಗ ನಾಕೈದು ಗಂಟೆ ಕಳೆದು ಬಿಟ್ಟಿತ್ತು. ಬೆಳಕು ಚೆನ್ನಾಗಿಯೇ ಹರಿದಿತ್ತು.
ಅರೆ ಮಂಪರಿನಲ್ಲಿ ಘಾಟಿ ಇಳಿಯುವ ಕಾರ್ಯಕ್ರಮವನ್ನು ಇಷ್ಟವಿಲ್ಲದಿದ್ದರೂ ಮತ್ತೊಂದು ದಿನಕ್ಕೆ ಮುಂದೂಡಬೇಕಾಯಿತು.
ಬೆಂಗಳೂರಿನ ದಾರಿಯಲ್ಲಿ ಸಿಕ್ಕುವ ಸಿಂಗಪುರವೋ, ಕೌಲಾಲಂಪುರವೋ ಬಂದು ಮುಟ್ಟುವವರೆಗೂ ಎಲ್ಲಾ ಯಾಂತ್ರಿಕವಾಗಿ ಆಗತ್ತೆ. ಸಿಡ್ನಿಯಲ್ಲಿ ಬ್ಯಾಗೇಜ್ ಚಕಿನ್, ಸಿಂಗಪುರದಲ್ಲಿ ಇಳಿದು, ಏರ್ಪೋರ್ಟ್ ಸುತ್ತಿ, ಮತ್ತೆ ವಿಮಾನ ಹತ್ತುವುದು ಎಲ್ಲ. ಆದರೆ ಅಲ್ಲಿಂದ ಮತ್ತೆ ವಿಮಾನದಲ್ಲಿ ಹಾರುವಾಗ, ನೆಲ ನನ್ನಿಂದ ದೂರ ಸರಿಯುವಾಗ ಅಲ್ಲಿಯವರೆಗಿದ್ದ ಯಾಂತ್ರಿಕತೆ ಮಾಯವಾಗಿ ಒಂದು ರೀತಿಯ ಮಾಂತ್ರಿಕತೆ, ಭಾವುಕತೆ ಆವರಿಸಿಕೊಳ್ಳುವುದು ಪ್ರತಿ ಸಲದ ಅನುಭವ.
ಈ ಸಲವೂ ಸಿಂಗಪುರದಿಂದ ವಿಮಾನ ಮೇಲೇರುತ್ತಿದ್ದಂತೆ ವಿಚಿತ್ರವಾಗಿ ಕವಿಯುವ ಈ ಭಾವ ಏನು ಅಂತ ಪ್ರತಿಸಲದಂತೆ ನೋಡಿಕೊಳ್ಳುತ್ತೇನೆ. ನಾನೀಗ ಇಲ್ಲಿ ಬಿಡುತ್ತಿರುವ ನೆಲವನ್ನ ಮತ್ತೆ ಮುಟ್ಟುವುದು ಇಂಡಿಯಾದಲ್ಲಿ, ನನ್ನ ಪ್ರೀತಿಯ ಬೆಂಗಳೂರಲ್ಲಿ ಅನ್ನುವುದು ದಟ್ಟವಾಗಿ ಸುತ್ತಿಕೊಂಡಿತು. ಎರಡೆರಡು ವರ್ಷಕ್ಕೊಮ್ಮೆ ಬರುತ್ತಿದ್ದರೂ ಇದೇನು ಹೀಗೆ ಅಂತ ತಿಳಿಯುವುದಿಲ್ಲ.
ನೆಲದಲ್ಲಿ ರಾತ್ರಿ ದೀಪಗಳ ಚುಕ್ಕೆಯಲ್ಲಿ ಹರಡಿಕೊಂಡಿರುವ ಬೆಂಗಳೂರು ಪ್ರತಿಸಲವೂ ಸುಂದರವಾಗಿ ಕಾಣತ್ತೆ. ಪಿಳಿಪಿಳಿಸುವ ದೀಪದಲ್ಲಿ ಈಗೀಗ ಬಿಳಿ ಮತ್ತು ಕಿತ್ತಳೆ ಬಣ್ಣ ಕೂಡಿಕೊಂಡಿದೆ. ವಿಮಾನ ಇಳಿಯುತ್ತಿದ್ದಂತೆ ಕಾಣುವ ರಸ್ತೆಗಳಲ್ಲಿ ಓಡಾಡುವ ವಾಹನಗಳು ಕೂಡ ಸಣ್ಣ ಮಗುವಿನಂತೆ ಒಳಗೊಳಗೇ ರೋಮಾಂಚನ ಬೆಂಗಳೂರನ್ನು ತಬ್ಬಿಕೊಳ್ಳುವಂತೆ ವಿಮಾನ ನೇರವಾಗಿ ಆ ದೀಪಗಳ ರಾಶಿಯ ನಡುವೇ ಇಳಿಯುತ್ತದೆ, ನೆಲ ಮುಟ್ಟುತ್ತದೆ, ತೆವಳಿ ಬಂದು ನಿಲ್ಲುತ್ತದೆ. ಇವೆಲ್ಲಾ ಏನನ್ನೋ ಎದುರು ನೋಡುತ್ತಿರುವ ಕಾತರದಲ್ಲಿ ತುಂಬಾ ದೀರ್ಘ ಅನಿಸುತ್ತಿದೆ.
ಹೊರಗೆ ಮಳೆಯಲ್ಲಿ ತೇವವಾದ ನೆಲ ಏರ್ಪೋರ್ಟಿನ ದೊಡ್ಡ ದೊಡ್ಡ ದೀಪಗಳ ಬೆಳಕಲ್ಲಿ ಮಿರಿಮಿರಿ ಮಿಂಚುತ್ತಿದ್ದೆ. ಇಳಿಯುವ ಕಾತರ. ವಿಮಾನಕ್ಕೆ ಸಿಕ್ಕಿಸಿದ ತೂಬಿಗೆ ಕಾಲಿಡುತ್ತಿದ್ದಂತೆ ತೂಬಿನ ಮಾಡು ತೂತಾಗಿ ಮಳೆಯ ನೀರು ದಳದಳ ಎಂದು ಸುರಿಯುತ್ತಿದೆ. ಅಲ್ಲಿ ಕಾಲಿಟ್ಟು ಜಾರದಿರಲಿ ಎಂದು ದಿನಪತ್ರಿಕೆಯ ಹಾಳೆಗಳನ್ನೆಲ್ಲಾ ಹರಡಿದ್ದಾರೆ. ಅದು ಇನ್ನೂ ಪಿತಪಿತ ಮಾಡಿಬಿಟ್ಟಿದೆ. ಒಳಗೊಳಗೇ ನಗುತ್ತೇನೆ. ಭಾವುಕನಾಗಿರಲು ಬೆಂಗಳೂರು ಬಿಡುವುದಿಲ್ಲ. ಇಮ್ಮಿಗ್ರೇಷನ್ನವ ಕಣ್ಣಿಗೆ ಕಣ್ಣು ಕೊಡಲಿಲ್ಲ. ಕನ್ನಡದಲ್ಲಿ ಮಾತಾಡಲು ಸಿಕ್ಕುವ ಮೊದಲಿಗ. ಮಾತಾಡಲಿಲ್ಲ. ಕ್ಷಣದಲ್ಲಿ ಪಾಸ್ಪೋರ್ಟ್ ಗುದ್ದಿ ನನ್ನತ್ತ ತಳ್ಳಿ ನನ್ನ ಹಿಂದಿನವರನ್ನು ಕೈಬೀಸಿ ಕರೆದ. ಥ್ಯಾಂಕ್ಸ್ ಹೇಳಿ ಹೊರ ಬಂದೆ.
ಅಲ್ಲಿಂದ ಕೆಳಗಿಳಿಯುವ ಎಸ್ಕಲೇಟರ್ ಕೆಟ್ಟಿರಬೇಕು. ಆದರೆ ಅದರ ತುಂಬಾ ಮತ್ತು ಪಕ್ಕದ ಮೆಟ್ಟಿಲ ತುಂಬಾ ಜನ. ಏನೋ ಅನಾಹುತ ಆದವರಂತೆ ತುಂಬಿಕೊಂಡಿದ್ದರು. ಓಹೋ. ಕೆಳಗೆ ಹಾಲಿನಲ್ಲಿ ಕಿಕ್ಕಿರಿದಿರುವ ಜನ. ಸ್ಥಳವಿಲ್ಲ. ಅದಕ್ಕೆ ಎಸ್ಕೆಲೇಟರ್ ಆರಿಸಿದ್ದಾರೆ. ಮನೆಯವರನ್ನು ಕಾಣುವ ಕಾತರದ ಕೊನೆಯ ಕ್ಷಣಗಳು. ಸುಲಭವಲ್ಲ. ತಿಣಕಿ, ತೂರಿ, ಹಾರಿ, ನನ್ನ ಸಾಮಾನು ಪಡೆದು ಹೊರಬಂದೆ.
ಹೌದು ಬೆಂಗಳೂರು ಭಾವುಕನಾಗಿರಲು ಬಿಡುವುದಿಲ್ಲ. ಒಳಗೊಳಗೇ ಪ್ರೀತಿಯಿಂದ ನಕ್ಕೆ.
ರಂಜಾನ್ ಹಬ್ಬದ ಅರ್ಥ ಹುಡುಕುತ್ತಿದ್ದೆ.
ರಂಜಾನಿಗೆ ಅರಾಬಿಕ್ಕಿನ ಮೂಲ ಪದ `ರಮಿದ` ಅಥವಾ `ಅರ್-ರಮದ್`. ಅವುಗಳು ಸೂಚಿಸುವುದು ತೀವ್ರವಾಗಿ ಸುಡುವ ಒಣ ಉರಿಯನ್ನು- ಅದೂ ನೆಲಕ್ಕೆ ಸಂಬಂಧಿಸಿದ್ದು. ಅದೇ ಮೂಲಪದದಿಂದ ಹುಟ್ಟಿದ ರಮ್ದಾ ಪದದ ಅರ್ಥ-ಬಿಸಿಲಿಗೆ ಸುಟ್ಟ ಮರಳು ಎಂದು. ಕೆಲವರು ಹಸಿವಿನಿಂದ ಹೊಟ್ಟೆಯಲ್ಲಿ ಸುಡುವ ಅನುಭವವನ್ನು ಅದು ಸೂಚಿಸುತ್ತದೆ ಎಂದು ಹೇಳಿದರೆ, ಇನ್ನು ಕೆಲವರು ಅದು ಬಿಸಿಲು ನೆಲವನ್ನು ಸುಡುವಂತೆ ಸದ್ಭಾವ ದುಷ್ಟತನವನ್ನು ಸುಟ್ಟುಹಾಕುವುದರ ಸಂಕೇತ ಎನ್ನುತ್ತಾರೆ. ಇನ್ನೂ ಕೆಲವರ ಪ್ರಕಾರ, ಮರಳು ಹಾಗು ಕಲ್ಲುಗಳು ಬಿಸಿಲನ್ನು ಅವಾಹಿಸಿ ತಾವೇ ಸುಡುವಂತೆ, ಹಸಿವಿನಲ್ಲಿ ಅಲ್ಲಾಹುವಿನ ನೆನಪು ಹಾಗು ಪಶ್ಚಾತ್ತಾಪದ ಆವಾಹನೆ ಸುಲಭ ಎನ್ನುತ್ತಾರೆ.
ಅರ್-ರಮದ್- ಮೂಲಪದದಿಂದಲೇ ಹುಟಿದ ಗಾದೆ- ಕಲ್ ಮುಸ್ತಜೀರ್ ಮಿನರ್, ರಮದಾ ಬಿನ್ನರ್. ಬಾಣಲೆಯಿಂದ ಹಾರಿ ಬೆಂಕಿಗೆ ಬಿದ್ದದ್ದು. ಈ ಗಾದೆಯನ್ನು ಓದುತ್ತಿದ್ದಂತೆ, ಜಾಗತಿಕ ಮಹಾಶಕ್ತಿಗಳ ಬೇಗೆಯಡಿ ಸುಡುತ್ತಲೇ ಇರುವ ಪ್ಯಾಲಸ್ಟೇನಿನ ಮಕ್ಕಳ ಮುಖಗಳು ಮನಕ್ಕೆ ಎದುರಾದವು. ಇನ್ನು ಸುಡಲು ಏನೂ ಉಳಿದಿಲ್ಲದಿದ್ದರೂ ಪರಿತಾಪ ಮುಗಿಯದ ಆಫ್ಗಾನಿಸ್ತಾನ್ದ ದಿಟ್ಟ ಮಹಿಳೆಯರು ನಕ್ಕರು. ಬಾಣಲೆಯಿಂದ ಬೆಂಕಿಗೆ ಬಿದ್ದು ಕರಟುತ್ತಿರುವ ಇರಾಖಿನಲ್ಲಿ ತಲೆಗೆ ಕೈಹೊತ್ತು ಕೂತವರು ಮನದ ಚಿತ್ರಗಳಾದರು. ಎರಡು ಹೊಟ್ಟೆ ಉರಿಗಳ ನಡುವೆ ಒಣಗಿ ನಲಗುತ್ತಿರುವ ಪ್ರೀತಿಯ ಕಾಶ್ಮೀರದ ತಂಪೆಲ್ಲಿ ಹಾರಿದೆ ಎಂದು ಹುಡುಕುವಂತಾಯಿತು.
ಪರಿಸರದ ಮೇಲೆ ಮನ ಬಂದಂತೆ “ಆಕ್ರಮಣ” ಮಾಡುತ್ತಿದ್ದೇವೆ. ಅಂಥ ಜೀವನ ರೀತಿಯನ್ನೇ ಮೆರೆಯುತ್ತಿದ್ದೇವೆ. ಈ ಬುವಿಯನ್ನು ಕಾದ ಬಾಣಲೆ ಮಾಡುತ್ತಿದ್ದೇವೆ. ಹಾಗೆಂದು ಗೊತ್ತಿದ್ದೂ, ಅದರ ಬಗ್ಗೆ ತಣ್ಣಗೆ ಸಣ್ಣ ಪುಟ್ಟ ಮಾತುಗಳನ್ನಾಡಿಕೊಂಡು ಕೂತಿದ್ದೇವೆ.
ಕಣ್ಣೆದುರಿನಲ್ಲೇ ನಡೆಯುತ್ತಿರುವ ಲೋಕದ ಅನಾಚಾರಗಳನ್ನು, ಹತ್ಯಾಕಾಂಡಗಳನ್ನು ನೋಡುತ್ತಾ ಮೂಕರಾಗಿ ಕೂರವ ನಮ್ಮ ಪಾಪಗಳಿಗೆ ಪಶ್ಚಾತ್ತಾಪ ಪಡಲು ಒಂದಲ್ಲ ಸಾವಿರಾರು ರಂಜಾನ್-ವ್ರತ ಸಾಲದೇನೋ ಎಂದು ಮನಸ್ಸು ಒಣಗಿ ಮುರುಟುತ್ತದೆ.
ಅಲ್ಲಾಹುವಿನ ದೂತ ಒಂದು ಹಾದಿತ್ತಿನಲ್ಲಿ ಹೇಳುವಂತೆ- `ಬೆಳಗಿನ ಎಳೆಬಿಸಿಲು ಮರಿ ಒಂಟೆಗೆ ಉರಿಯಾಗಿ ತಟ್ಟಿದಾಗ ಬಾಕಿವುಳಿದ ತಪ್ಪಿತಸ್ಥರ ಪ್ರಾರ್ಥನೆಯ ಕಾಲ ಬಂದಿದೆ`.
ಈ ಮರಣ ಪದ್ಯಕ್ಕೆ ಗಾಢವಾಗಿ ಪ್ರತಿಕ್ರಿಯಿಸಿದ ಇಲ್ಲಿ ಬ್ಲಾಗಿಸುವ ಟೀನಾ ಸೋಲ್ಸನಿತ್ಸಿನ್ನ “ಎ ಡೇ ಇನ್ ದ ಲೈಫ್ ಆಫ್ ಇವಾನ್ ಡೆನೀಸೊವಿಚ್” ನಾನು ಓದಬೇಕು ಎಂದು ಸೂಚಿಸಿದರು. ಓದಬೇಕು ಎಂದು ಈ ಹಿಂದೆ ಅಂದುಕೊಂಡಿದ್ದರೂ ಓದಲಾಗಿರಲಿಲ್ಲ. ಇದೊಂದು ಪ್ರೇರಣೆ ಸಾಕಾಯ್ತು. ಕೈಗೆತ್ತಿಕೊಂಡೆ.
ನಡುವೆ ಏಪೆಕ್ ಸಮಿಟ್ನ ಪ್ರೊಟೆಸ್ಟ್ನಲ್ಲಿ ಪಾಲ್ಗೊಂಡಾಗ ನಾನು ಹಲವರಿಗೆ ಉತ್ತರಿಸಬೇಕಾಗಿ ಬಂದ ಪ್ರಶ್ನೆ “ನೀನು ಏನನ್ನು ವಿರೋಧಿಸುತ್ತಿದ್ದೀಯ?” ಕೆಲಸ, ಹಣ ಆಸೆಗಳು ಎಲ್ಲ ಇರುವ ನಿನಗೆ ತೊಂದರೆ ಏನು? ಅಂದರೆ, ವಯ್ಯಕ್ತಿಕವಾಗಿ ನಿನಗೆ ಏನು ಅನ್ಯಾಯವಾಗಿದೆ? ಪ್ರಶ್ನೆ ಕೇಳಿದವರು ಉತ್ತರಿಸದ ನನ್ನನ್ನು ಒಂದು ಕ್ಷಣ ದಿಟ್ಟಿಸಿ, ಕೇಳಬಾರದಿತ್ತು ಎಂಬಂತೆ ತಟ್ಟನೆ ತಮ್ಮ ಕೆಲಸಕ್ಕೆ ವಾಪಸಾಗುತ್ತಾರೆ. ಅವರ ತಲೆಯಲ್ಲಿ ಪ್ರಶ್ನೆ. ನನ್ನ ತಲೆಯಲ್ಲಿ ಅದಕ್ಕೆ ಉತ್ತರವಾಗಲು ನಿರಾಕರಿಸುವ ಹಲವು ವಿಚಾರಗಳು.
ಸಿಡ್ನಿಯಲ್ಲಿ ವಸಂತ ಛಳಿಗಾಲದ ಬಟ್ಟೆ ಕಳಚಿ ಹೊಸ ಉನ್ಮಾದದಿಂದ ಕುಣಿಯುತ್ತಿದೆ. ಹಚ್ಚವಾಗಿ ನಗುವ ಬಿಸಿಲು. ಮಳೆ ಬಂದು ತೊಳೆದಿಟ್ಟ ನೆಲದಲ್ಲಿ ಹಸಿರು ಚಿಗುರು. ಎಲ್ಲ ಹೋದ ವರ್ಷದಂತೆಯೇ. ಆದರೆ ಈ ವರ್ಷ ಆಸ್ಟ್ರೇಲಿಯಾದ ಬರಗಾಲ ಕೊನೆಗಾಣುತ್ತಿರಬಹುದು ಎಂಬ ಉಲ್ಲಾಸವೂ ಇದೆ. ಅದು ಮನಸ್ಸನ್ನು ಹಗುರಾಗಿಸಿದೆ.
ಸೋಲ್ಸನಿತ್ಸಿನ್ ಸೈಬೀರಿಯಾದಲ್ಲಿ ಅಮಾನುಷವಾಗಿ ತಾನೇ ಬಂಧಿಸಲ್ಪಟ್ಟಿದ್ದ. ಹತ್ತಾರು ವರ್ಷ ಮಾರಣಾಂತಿಕ ಹಿಮದಲ್ಲಿ ಹಿಂಸೆ ಅನುಭವಿಸಿದ್ದ. ಸಾಯದೆ ಉಳಿದು ಪಾರಾಗಿ ತನ್ನ ಸೂಕ್ಷ್ಮತೆಯನ್ನು ಉಳಿಸಿಕೊಂಡಿದ್ದ. ಇವಾನ್ ಪಾತ್ರದ ಮೂಲಕ ತನ್ನ ಇಡೀ ಅನುಭವವನ್ನು ಒಂದು ದಿನದ ಆಗು ಹೋಗಿನಲ್ಲಿ ಪ್ರತಿಫಲಿಸುತ್ತಾನೆ. ಅವನು ಅಲ್ಲಿ ಯಾಕೆ ಬಂಧನದಲ್ಲಿದ್ದಾನೆ? ಕತೆಯ ಮೂರನೇ ಒಂದು ಭಾಗದವರೆಗೂ ಕತೆಗಾರ ಹೇಳುವುದಿಲ್ಲ. ನಂತರ ಅದನ್ನು ಸಹಜವಾಗಿ ಹೇಳುತ್ತಾನೆ. ಆದರೆ, ಅಷ್ಟರಲ್ಲಿ ಅದು ಗೌಣ ಎಂದು ಅನಿಸುವಲ್ಲಿಗೆ ಓದುಗ ಬಂದು ನಿಂತಿರುತ್ತಾನೆ. ಅದೊಂದು ಅಚ್ಚರಿ, ಆದರೆ ಸಹಜವೂ ಕೂಡ.
ನಮ್ಮ ವಯ್ಯಕ್ತಿಕದ ಆಚೆಗೆ ನಡೆಯುವ ಅನ್ಯಾಯ ನಮಗೂ ಸಂಬಂಧಪಟ್ಟಿದ್ದು. ಏಪೆಕ್ ಪ್ರೊಟೆಸ್ಟ್ ಬಗ್ಗೆ ನನ್ನನ್ನು ಪ್ರಶ್ನಿಸಿದವರಿಗೆ ಅದನ್ನು ಹೇಗೆ ಹೇಳಲಿ? ಮಾನವೀಯತೆ ಇಲ್ಲದ ಪರಿಸರ ನನ್ನ ಮಾನವೀಯತೆಯನ್ನೂ ಕಸಿದುಕೊಳ್ಳುತ್ತದೆ. ಹೇಗೆ ಅದನ್ನು ಅರ್ಥಮಾಡಿಸಲಿ? ಆರ್ಥಿಕ ಏಳಿಗೆಗೆ ಬಲಿಯಾಗುವವರು ಯಾರು? ಅವರು ಯಾಕೆ ಬಲಿಯಾಗಬೇಕು? ಈ ಪ್ರಶ್ನೆಗಳನ್ನೆಲ್ಲಾ ಹೇಗೆ ಉತ್ತರವನ್ನಾಗಿ ಮಾರ್ಪಡಿಸಿ ಪ್ರಶ್ನಿಸದವರ ಮುಂದೆ ಹಿಡಿಯಲಿ? ಒಳಗೊಳಗೇ ಇದೆಲ್ಲದರ ಜತೆ ಗುದ್ದಾಡುತ್ತಿದ್ದೇನೆ. ಆದರೆ ಹೊರಗೆ ನಗುತ್ತೇನೆ.
ವಸಂತದ ಬಿಸಿಲಿಗೆ ಮುಖವೊಡ್ಡಿ ಅಸಾಧಾರಣ ಸ್ವಾಸ್ಥ್ಯ ಅನುಭವಿಸುತ್ತೇನೆ. ವಸಂತಕ್ಕೆ ತಾನು ಕೊಂಚ ಬೇಗ ಬಂದುಬಿಟ್ಟೆನೆ ಎಂಬ ಅನುಮಾನ. ಮತ್ತೊಂದು ವಾರ ಮಳೆ, ಛಳಿ. ಜನರಿಗೂ ಕೊಂಚ ಗಲಿಬಿಲಿ. ನಿಜವಾಗಿಯೂ ಇದು ವಸಂತವೇ? ವಸಂತ ಬಂದು ಬಿಟ್ಟಿತೆ? ಮರೆತು ಬಿಟ್ಟೆನೆ? ವಸಂತವೆಂದರೆ ಇದೇನೆ? ಇದು ನೋಡಿ ಯಾವಾಗಲೂ ಹೀಗೆ. ಕಾಲ ಬದಲಾಗುವುದು ಸ್ವಿಚ್ ಹಾಕಿದ ಹಾಗಲ್ಲ. ವಿದ್ಯುತ ದೀಪ ಹಾಕಿ ಆರಿಸಿದಂತಲ್ಲ. ಅದು ನಿಧಾನಕ್ಕೆ ಅನುಮಾನದಿಂದ ಜರುಗುತ್ತದೆ. ಅದಕ್ಕೆ ಹಲವಾರು ಸಣ್ಣ ಸಣ್ಣ ಒತ್ತಡಗಳಿರಬೇಕಾಗುತ್ತದೆ. ಅದನ್ನು ನಾನು ನೀವು ತರಬೇಕಷ್ಟೆ. ಸಣ್ಣ ಸಣ್ಣ ಪ್ರಮಾಣದಲ್ಲಾದರೂ ಸರಿಯೆ.
ಸೋಲ್ಸನಿತ್ಸಿನ್ ವಿವರಿಸುವ ದಿನವೂ ಅದರ ಹಿಂದಿನ ದಿನದಿಂದ ಬೇರೆಯಾಗಿ ಕೊಯ್ದಿಟ್ಟದ್ದಲ್ಲ. ಹಿಮದಲ್ಲಿ ಇಡೀ ದಿನ ಒದ್ದಾಡಿ ರಾತ್ರಿ ತನ್ನ ಹಾಸಿಗೆಯ ಹರಕು ಬಟ್ಟೆ, ತೂತು ಕಾಲುಚೀಲಗಳಲ್ಲೇ ಶಾಖ ಹುಟ್ಟಿಸಿಕೊಳ್ಳುವುದು. ಮತ್ತೆ ರೋಲ್-ಕಾಲ್ ಕರೆದು ಬಿಟ್ಟಾರು ಎಂದು ಹೆದರುತ್ತಾ ದೇಹ ನಿದ್ದೆಗಿಳಿಯುವುದು. ಆ ನಿದ್ದೆಯೊಂದೆ ಹಿಂದಿನ ದಿನದಿಂದ ಮುಂದಿನ ದಿನವನ್ನು ಬೇರ್ಪಡಿಸುವುದು. ಓದುತ್ತಿರುವ ವಸಂತದಲ್ಲಿ ನನ್ನನ್ನು ಇವೆಲ್ಲಾ ನಡುಗಿಸುತ್ತದೆ. ಅವನಿಗೆ ನಿದ್ದೆ ಅಗತ್ಯ. ಆದರೆ ಇವಾನ್ ಮಾಡುವ ನಿದ್ದೆ ಎಚ್ಚರ ತುಂಬಿದ ನಿದ್ದೆ. ನಿದ್ದೆಯಲ್ಲೂ ತಪ್ಪು ಮಾಡಿಬಿಟ್ಟರೆ?
ಏಪೆಕ್ ಪ್ರೊಟೆಸ್ಟಿಗೆ ಹೋಗಲು ಏನು ಕಾರಣ ಎಂದು ಕೇಳುವುದೇ ಒಂದು ರಾಜಕೀಯ ಪ್ರಶ್ನೆ ಅನ್ನಿಸಿತು. ಹಲವಾರು ಕಾರಣ ಕೊಟ್ಟು ಸಮರ್ಥಿಸಿಕೊಳ್ಳಬಹುದು. ನಾನು ಅನ್ನುವ ಇದು, ನಾನೊಬ್ಬನೇ ಅಲ್ಲ. ನಾನು ನನ್ನ ಸಮುದಾಯ, ನಾನು ನನ್ನ ಸಮಾಜ ಕೂಡ. ಅದಕ್ಕೆ ಹಿಡಿದ ಹುಳುಕು ನನಗೂ ಹಿಡಿದ ಹಾಗೆ. ನಾನು ನಿದ್ದೆ ಮಾಡುತ್ತಿಲ್ಲ. ಎಚ್ಚರವಾಗಿದ್ದೀನಿ. ಹಾಗೆಂದು ನನಗೆ ನಾನೇ ಹೇಳಿಕೊಳ್ಳುವ ಒಂದು ವಿಧಾನ ಇದು. ಚೆನ್ನಾಗಿ ನಿದ್ದೆ ಮಾಡವಂಥ ಸ್ವಸ್ಧ ಪರಿಸರದಲ್ಲಿ ಏಕೆ ನಿದ್ದೆಗೆಡಬೇಕು? ಎಚ್ಚರ ಸವಲತ್ತಲ್ಲ. ಎಚ್ಚರ ಹೊಟ್ಟೆ ತುಂಬಿದವರ ಸೌಖ್ಯವಲ್ಲ. ಅದೊಂದು ಅಗತ್ಯ. ಅಸಹನೆಯನ್ನು ಹಂಚಿಕೊಳ್ಳುವುದೂ ಅಷ್ಟೆ.
ಸೋಲ್ಸನಿತ್ಸಿನ್ ಕತೆಯನ್ನು ೧೯೬೨ರಲ್ಲಿ ಸೋವಿಯತ್ ಪ್ರಧಾನಿ ಕೃಷೇವ್ನ ಪರವಾನಗಿ ಪಡೆದು ಪ್ರಕಟಿಸಿದರಂತೆ. ಅದು ಕಾಲಮಾನದಲ್ಲಿ ತುಂಬಾ ದೂರದ ಸಂಗತಿ. ರಾಜಕೀಯ ಪರಿಸ್ಥಿತಿಯಲ್ಲೂ ಕೂಡ. ಹಾಗಾಗಿಯೇ ಇವಾನ್ ಕತೆ ಚರಿತ್ರೆಯಂತೆ ಕಾಣುತ್ತದೆ. ಆದರೆ ಒಂದು ವಿಪರ್ಯಾಸ ನೋಡಿ. ಮರಣ ಪದ್ಯ ಕೂಡ, ಲೋಕದಲ್ಲೇ ಅತಿ ಹೆಚ್ಚು ಸ್ವಾತಂತ್ಯ್ರವಿರುವ ಅಮೇರಿಕದಂಥ ದೇಶದ ಆಡಳಿತದ ಪರವಾನಗಿ ಪಡೆದು ಪ್ರಕಟವಾಗಬೇಕಾಯಿತು.
ನೋಡಿ - ನಿದ್ದೆ ವಿಪರ್ಯಾಸಗಳನ್ನು ಒಂದಕ್ಕೊಂದು ಹೊಂದಿಸಿಬಿಡುತ್ತದೆ. ಅದನ್ನು ಕನಸಾಗಿ ಹೆಣೆದು ನಾವು ಅದರಲ್ಲಿ ಕಳೆದುಹೋಗುವಂತೆ ಮಾಡಿಬಿಡುತ್ತದೆ. ಎಚ್ಚರ ಮಾತ್ರ ಅದರೊಡನೆ ಗುದ್ದಾಡ ಬೇಕಾಗುತ್ತದೆ.
ವಸಂತದ ಅನುಮಾನ ಈಗ ವಿಷಾದವಾಗಿ ಕಾಡುತ್ತದೆ. ವಿಷಾದದಿಂದ ಕೈಚೆಲ್ಲದೆ, ವಿಷಾದವನ್ನು ಇಟ್ಟುಕೊಂಡೂ ಎಚ್ಚರವಾಗಿರುವುದು ಪಡಬೇಕಾದ ಪಾಡಷ್ಟೇ ಅಲ್ಲ. ಅದು ಜವಾಬ್ದಾರಿ ಕೂಡ. ಅದನ್ನು ನನಗೆ ನಾನೇ ಆಗಾಗ ಹೇಳಿಕೊಳ್ಳುವುದೂ ಮುಖ್ಯ. ಅದು ಯಾವ ರೀತಿಯಲ್ಲಾದರೂ ಆಗಬಹುದು.
ಇವಾನ್ ಹಿಮದ ಆಳದಲ್ಲಿ,
ವಸಂತಕ್ಕೆ ಎದುರು ನೋಡುತ್ತಾ,
ಸಣ್ಣಪುಟ್ಟ ಪ್ರತಿರೋಧವನ್ನು ತೋರಿಸುತ್ತಾ ಬದುಕುಳಿದ ಹಾಗೆ,
ತೋರಿಸಿದ್ದರಿಂದಲೇ ಬದುಕುಳಿದ ಹಾಗೆ…

ಸಿಡ್ನಿಯಲ್ಲಿ ನಡೆಯುತ್ತಿರುವ ಏಪೆಕ್ ಸಮ್ಮಿಟ್ನ ಸಂದರ್ಭದಲ್ಲಿ ಬುಷ್ ಮತ್ತಿತರ ಸಮರಾಕಾಂಕ್ಷಿಗಳ ವಿರುದ್ಧ ನಡೆದ ಪ್ರೊಟೆಸ್ಟ್ ಮಾರ್ಚಿಗೆ ಈವತ್ತು ಹೋಗಿದ್ದೆ. ಮಕ್ಕಳು-ಮರಿಗಳಿಂದ ಹಿಡಿದು ಮುದುಕರವರೆಗೆ ಗಾಂಧಿವಾದಿಗಳಿಂದ ಹಿಡಿದು ವೇಶ್ಯೆಯರವರೆಗೆ ಎಲ್ಲರೂ ಈವತ್ತು ಸೇರಿದ್ದರು.

ವಾರದಿಂದ ಸಿಡ್ನಿಗೇ ಒಂದು ರೀತಿಯ ದಿಗ್ಬಂಧನ ಹಾಕಿಟ್ಟ ಅನುಭವ. ಹತ್ತಾರು ಅಡಿ ಎತ್ತರದ ಕಬ್ಬಿಣದ ಬೇಲಿಗಳನ್ನು ನಗರದ ಮುಖ್ಯ ರಸ್ತೆಗಳಿಗೇ ಹಾಕಿಬಿಟ್ಟಿದ್ದಾರೆ. ಲೋಕದ ೨೧ ರಾಷ್ಟ್ರದ “ಪ್ರತಿಷ್ಟಿತರು” ಓಡಾಡಲು ಅನುಕೂಲವಾಗುವಂತೆ. ನಮ್ಮನಿಮ್ಮಂತವರ ನೆರಳು ಅವರು ತುಳಿಯದಂತೆ ದೂರದಲ್ಲೇ ಹೋಗಬೇಕು! 
ಈವತ್ತಿನ ಚಳವಳಿಯೂ ೨ ಕಿ.ಮಿ ದೂರದಲ್ಲೇ ಇಟ್ಟಿದ್ದರು. ಈವತ್ತು ಭಾರಿ ಹಿಂಸಾಚಾರ ನಡೆಯುತ್ತದೆ. ಸಿಡ್ನಿ ಹಿಂದೆಂದೂ ಇಂಥ ಹಿಂಸೆ ಕಂಡಿಲ್ಲ. ೨೦ ಸಾವಿರ ಜನ ಬರುತ್ತಾರೆ. ಯಾರು ಏನು ಮಾಡುತ್ತಾರೆ ಎಂದು ಹೇಳಲಾಗುವುದಿಲ್ಲ. ಹೀಗೆಲ್ಲಾ ಮೊದಲೇ ಜನರನ್ನು ಪೋಲೀಸರು ಹೆದರಿಸಿದ್ದರು. ಪೋಲೀಸ್ ಕುದುರೆಗಳಿಗೆ ಯಾವುದೋ ಫ್ಲೂ ರೋಗ ಅಂತ ನೀರಿನ ಕಾನೆನ್ ಟ್ರಕ್ಗಳು ಬಂದಿದ್ದವು!
ಎಲ್ಲಾ ಹುಸಿಯಾಯಿತು. ೫೦೦೦ಕ್ಕೂ ಮಿಕ್ಕಿ ಬಂದಿದ್ದ ಜನರೆಲ್ಲಾ ಪೋಲೀಸರನ್ನು ನೋಡಿ ಪಕಪಕ ನಗುತ್ತಾ, ಖೂಳರ ವಿರುದ್ಧ ಘೋಷಣೆ ಕೂಗುತ್ತಾ, ಕುಣಿಯುತ್ತಾ ಓಡಾಡಿಕೊಂಡಿದ್ದರು! ಪೋಲೀಸರು ಏನೂ ಹಿಂಸಾಚಾರ ನಡೆಯದ್ದು ನೋಡಿ ಆತಂಕಗೊಂಡು ಕಡೆಯಲ್ಲಿ ಎಲ್ಲರನ್ನೂ ವಿನಾಕಾರಣ ರಸ್ತೆಯ ಒಂದು ಬದಿಗೆ ತಳ್ಳಲು ಶುರು ಮಾಡಿದರು! ಜನ ನಗುತ್ತಾ ಪಕ್ಕದ ಪಾರ್ಕಿನ ಒಳಗೆ ಭಾಷಣ ಕೇಳಲು ಹೋದರು!!
ಪೋಲೀಸ್ ಬಂದೋಬಸ್ತಿಗೆ ನೂರಾರು ಮಿಲಿಯನ್ ಡಾಲರ್ ಖರ್ಚು ಮಾಡಿದ್ದು ಏನಕ್ಕೋ ಎಂದು ಎಲ್ಲರ ಪ್ರಶ್ನೆ!
ನನ್ನ ಚಿತ್ರ ಬರಿಯೋದು ತುಂಬಾ ಸುಲಭ. ಸುಲಭ ಅಂದ ತಕ್ಷಣ ನನಗೆ ಬರಿ ಎರಡೇ ಆಯಾಮ ಅನ್ಕೋಬೇಡಿ. ಮೂರು ಆಯಾಮಾನೂ ಇದೆ. ಜಾಸ್ತಿ ಕೇಳಿದರೆ ನಾಕನೇ ಐದನೇ ಆಯಾಮಕ್ಕೂ ಚಾಚಿಕೋಬಹುದು. ಆದರೂ ಸ್ವಲ್ಪ ಹತ್ತಿರದಿಂದ ನೋಡಿದರೆ ಸಾಕು ತಕ್ಷಣ ನನ್ನ ಒಳಗೆಲ್ಲ ಗೊತ್ತಾಗೋ ಥರ ಚಿತ್ರ ಬರೀಬಹುದು.
ಓಕೆ. ಹೇಗಪ್ಪ ಅಂತ ತಲೆ ಕೆರಕೋಬೇಡಿ. ಹೀಗ್ಮಾಡಿ - ಮದ ಮತ್ಸರ ಲೋಭ ಮೋಹ ಎಲ್ಲಾನೂ ಒಂದು ಚೂರು ಚೂರು ಕತ್ತರಿಸಿ ಜೋಡಿಸಿ. ನೆಟ್ಟಗೆ ನೀಟಾಗಿ ಪಕ್ಕ ಪಕ್ಕದಲ್ಲಿ ಜೋಡಿಸಬೇಡಿ. ಒಂದರ ಮೇಲೆ ಇನ್ನೊಂದು ಇರಬೇಕು. ಲೋಭದ ಮೇಲೆ ವಕ್ರವಾಗಿ ಮದ. ಮೋಹದ ಮೂಲೆನಲ್ಲಿ ಮತ್ಸರ. ಹೀಗೆ ಸ್ವಲ್ಪ ಓರೆ ಕೋರೆ ಮಾಡಿ ಜೋಡಿಸಿ. ಎರಡು ಕಣ್ಣಗಳೂ ಸಮವಾಗಿ ಗುಂಡಗೆ ಇಡಬೇಡಿ. ಒಂದು ಸ್ವಲ್ಪ ಆಚೆಗಿಡಿ. ಒಂದು ಕಣ್ಣು ದೂರದಲ್ಲಿರೋದನ್ನ ಎವೆಯಿಕ್ಕದೆ ನೋಡೋ ಹಾಗೆ ಇದ್ದರೆ, ಮತ್ತೊಂದು ಕುರಿ ಕಣ್ಣು ಇಟ್ಟ ಹಾಗೆ ಇರಬೇಕು. ಯಾವ ಕಣ್ಣು ಹ್ಯಾಗೆ ಅಂತ ನಿಮಗೆ ನನ್ನನ್ನ ನೋಡಿದ ತಕ್ಷಣ ಗೊತ್ತಾಗತ್ತೆ. ಹಾಗೆ ಒಳ್ಳೆ ಉದ್ದನೆ ಮೂಗು ಬರೀಬೇಡಿ. ನಂದು ಮೊಂಡು. ಅಲ್ಲಲ್ಲಿ ಕೀರಿದ ಗಾಯ ಇದೆ ಮೂಗಿನ ಮೇಲೆ. ಅದನ್ನು ಮುಜುಗರ ಪಟ್ಕೊಂಡು ನೋಡದೇ ಇರಬೇಡಿ. ಬಾಯೂ ಅಷ್ಟೆ ಒಳ್ಳೇ ಗೆರೆಗಳೇನೂ ಬೇಡ. ತುಟ್ಟಿ ಹರಿದಿದೆ. ಒಂದೊಂದು ಸಲ ಅದಕ್ಕೆ ಪಿನ್ನು ಹಾಕಿಕೊಳ್ಳಬೇಕಾಗತ್ತೆ.
ಈಗ ಕರುಣೆ ಅಸಹ್ಯ ಭಯ ಎಲ್ಲಾ ದೂರಕ್ಕಿಡಿ. ಅಷ್ಟೇ ಅಲ್ಲ ತಮಾಷೆ, ದುಃಖ, ಸಿಟ್ಟು ಎಲ್ಲಾ ಮರೆತು ನನ್ನ ಅವತಾರ ನೋಡಿ. ಬರೆಯೋಕೆ ಮನಸ್ಸು ಆದರೆ, ಬರೀಯೋಕೆ ಆಗತ್ತೆ ಅನ್ನಿಸಿದರೆ ಬಣ್ಣ ಬ್ರಶ್ಶು ತಗೊಳ್ಳಿ ನಾನು ಬಂದು ನಿಮ್ಮ ಮುಂದೆ ಮಗು ಥರ ಕೂತ್ಕೋತೀನಿ.
ದೊಡ್ಡಕ್ಕೆ ಮುಖ ಬರೆದು ಅದಕ್ಕೆ ಚೆನ್ನಾಗಿ ಬಣ್ಣ ಬಳಿರಿ.
ಓರೆ-ಕೋರೆ, ಹರಿದ ತುಟಿ, ಮೂಗಿನ ಗಾಯ, ಕುರಿ ಕಣ್ಣು ಇದೆಲ್ಲಾ ಯಾರಿಗೂ ಕಾಣದ ಹಾಗೆ ಮಾಡಿಬಿಡಿ.
ಹಾಗೇ ಮುಖಕ್ಕೆ ಅಡಿಪಾಯದಂತಿದೆಯಲ್ಲ ಈ ಮದ ಮತ್ಸರ ಲೋಭ ಮೋಹ ಅದನ್ನೂ ಮುಚ್ಚಿಬಿಡಬೇಕು.
ಆವಾಗ ಎಲ್ಲಾರಿಗೂ ಇಷ್ಟ ಆಗೋ ಅಂತ ನನ್ನ ಚಿತ್ರ ತಯಾರಾಗತ್ತೆ.
ನಾನು ಯಾರಾಗಿದ್ದೀನಿ?
ಇದಕ್ಕೆ ಆನ್ಸರಿಸುವ ಕೆಲಸವನ್ನು ಆಧ್ಯಾತ್ಮಿಗಳು ಹೈಜಾಕ್ ಮಾಡೋಕೆ ಬಿಡಬಾರದು. ಅವರನ್ನು ಸ್ಟಾಪ್ ಮಾಡೋಕೆ ಆಗದೇ ಇರೋದರಿಂದ ಅವರು ಗಿಣಿಪಾಟ ಒಪ್ಪಿಸೋ ಡಲ್ಲಾದ ಆನ್ಸರ್ಗಿಂತ ಸಕತ್ತಾದ ಆನ್ಸರ್ಗಳನ್ನು ನಾವೇ ಹುಡುಕೊಂಡು ಬಿಡಬೇಕು.
ಫಸ್ಟ್, ಪರ್ಸನಲ್ ಆಗಿ ನೋಡಿದರೆ; ನೆನ್ನೆನೋ, ಟೆನ್ ವರ್ಷದ ಮುಂಚೆನೋ ಹೇಗಿದ್ದೆ, ಹೇಗೆ ತಿಂಕ್ ಮಾಡ್ತಿದ್ದೆ, ಈಗ ಹೇಗೆ ತಿಂಕ್ ಮಾಡ್ತೀನಿ ಅಂತ ಫೈಂಡೌಟ್ ಮಾಡಿಕೊಂಡರೆ ಸೆವೆರಲ್ ವಿಷಯಗಳು ಗೊತ್ತಾಗಿ ಬಿಡಬಹುದು.
ಇನ್ನು ನಮ್ಮ ಕಮ್ಯುನಿಟಿನಲ್ಲಿ ನಾನು ಯಾರಾಗಿದ್ದೆ. ನನ್ನ ಜನರ ಜತೆ ಯಾವ ಥರ ರಿಲೇಟ್ ಮಾಡ್ಕೋತಾ ಇದ್ದೆ. ಅವರ ಹ್ಯಾಪಿನೆಸ್ಸು ವರೀಸು ಹೇಗೆ ತಿಳಿಕೋತಾ ಇದ್ದೆ, ಈಗ ಹೇಗೆ ತಿಳ್ಕೋತಾ ಇದ್ದೀನಿ ಇದು ಇಂಪಾರ್ಟೆಂಟು.
ನೆಕ್ಸ್ಟು-ನಮ್ಮ ಸಮಾಜದಲ್ಲಿ ನಾನು ಯಾರಾಗಿದ್ದೆ. ನಮ್ಮ ಸಮಾಜದ ಪೀಪಲ್ಸ್ನಲ್ಲಿ ಯಾರು ನನಗೆ ಕರೆಕ್ಟ್ ಅನ್ಸತ್ತೆ. ಯಾರು ಹೋಪ್ಲೆಸ್ ಅನ್ಸತ್ತೆ. ಹೀಗೇ ಬಿಫೋರೂ ಅನ್ನಿಸ್ತಾ ಇತ್ತ? ಆರ್, ಈಗ ಡಿಫರೆಂಟ್ ಆಗಿ ಅನ್ಸತ್ತ? ಅಂತ ನೋಡಿಕೋಬೌದು.
ಫಿನಿಷ್ ಅನ್ಕೊಂಡರ?
ಇನ್ನೊಂದೆರಡು ಸ್ಟೆಪ್ಸ್ ಇದೆ.
ನಮ್ಮ ಕಂಟ್ರಿನಲ್ಲಿ ನಾನು ಯಾರಾಗಿದ್ದೆ, ಈವಾಗ ಯಾರಾಗಿದ್ದೀನಿ? ನಮ್ಮ ನೇಷನ್ನ ಯಾವ ಲೇಯರ್ಗೆ ನಾನು ಸೇರ್ತಿದ್ದೆ, ಈವಾಗ ಯಾವ ಲೇಯರ್ಗೆ ಅಡ್ಚಸ್ಟ್ ಆಗ್ತೀನಿ? ಇದನ್ನ ನೋಡಿಕೊಂಡರೂ ಪ್ರಾಫಿಟ್ ಇದೆ.
ಫೈನಲ್ಲಾಗಿ, ವರ್ಲ್ಡ್ನ ಎಲ್ಲ ಜನರನ್ನು ಕೌಂಟಿಗೆ ತಗೊಂಡರೆ ನಾನು ಎಲ್ಲಿ ಏನು ಯಾರಾಗಿದ್ದೀನಿ? ಇದೂ ವೆರಿ ವೆರಿ ಇಂಪಾರ್ಟೆಂಟ್.
ಹೀಗೆಲ್ಲಾ ಫೈಂಡೌಟ್ ಮಾಡಿಕೊಳ್ಳೊಕೆ ಹೋದರೆ ಕನ್ಫ್ಯೂಸ್ ಆಗತ್ತೆ ಅಂತ ವರಿ ಮಾಡಿಕೊಬೇಡಿ. ಏನೂ ಆಗಲ್ಲ. ಸ್ಟೆಪ್-ಬೈ-ಸ್ಟೆಪ್ ಹೋಗಬೇಕು ಅಷ್ಟೆ.
ನಾನು ಹೂ ಆಗಿದ್ದೀನಿ? ಒಳ್ಳೆ ಕ್ವೆಸ್ಚೆನ್ ಅಲ್ವ?
ಸಿಡ್ನಿಯಲ್ಲಿ ಚಳಿಗಾಲ ಕೊನೆಗಾಣುವ ದಿನಗಳಿವು. ಕಡೆಯ ಸಲ ತಬ್ಬಿ ಬೀಳ್ಕೊಡುವಂತೆ ಹೊರಗೆ ಮಂಜು ತಬ್ಬಿದೆ ನೆಲವ, ಮೌನ ತಬ್ಬುವ ಹಾಗೆ. ಇಲ್ಲೇಕೆ ಅಡಿಗರು ಬಂದರು ಎಂದು ಚಕಿತಗೊಳ್ಳುತ್ತೇನೆ. ಅವರ ಹಿಂದೆಯೇ ರಾಜರತ್ನಂ ಕೂಡ ಕಾಣಿಸಕೊಂಡರು ತಬ್ಬುವ ಮೋಡಿಗೆ ಮಡಕೇರಿಯಲ್ಲಿ ಮುಗ್ಧರಾಗುತ್ತಾ. ಎಲ್ಲಿ ಹೋದರೂ ಬಿಡದ ಇವರೆಲ್ಲರ ಸಾಂಗತ್ಯದ ಅದೃಷ್ಟ.
ದಟ್ಟವಾಗಿ ಮುಚ್ಚಿದ ಮಂಜಿನ ನಡುವೆ ನೆರಳುಗಳಂತೆ ಸರಿದಾಡುವ ಜನ. ನೀರವ. ಎಲ್ಲರೂ ಪಿಸುಗುಡುತ್ತಿರುವಂತೆ ಅನಿಸುತ್ತಿದೆ. ಜೋರಾಗಿ ಮಾತಾಡಿದರೆ ಎಲ್ಲಿ ಮಂಜು ಚದುರಿಬಿಡುತ್ತದೋ, ಚಳಿಗಾಲ ಓಡಿಬಿಡುತ್ತದೋ ಎಂಬ ಅಂಜಿಕೆಯೆ? ಚಳಿಗಾಲದಲ್ಲಿ ನಲಿಯುವ, ಚಳಿಯನ್ನು ಪ್ರೀತಿಸುವ ಜನರಿವರು. ಈಗೀಗ ನಾನೂ…?
ಹತ್ತಾರು ಅಡಿಗಳಾಚೆ ಏನೂ ಕಾಣದ ಮಂಜು. ರೈಲು ಬಂತೇ ಎಂದು ಬಿಳಿಯ ಗೋಡೆಯಲ್ಲಿ ಹುಡುಕುವ ಕಣ್ಣುಗಳು. ಕಣ್ಣಿಗೆ ಬೀಳುವ ಎಷ್ಟೋ ಮುಂಚೆ ರೈಲಿನ ಸದ್ದು ಎಲ್ಲರಿಗೂ ಕಚಗುಳಿಯಿಟ್ಟಾಗ ನನಗೆ ಕಾಣಿಸಿದ್ದು-
‘ಹಬ್ಬಿರುವ ಮಬ್ಬಿನೊಳಗೊಬ್ಬನೇ ಮುದುಕ
ಕೋಲೂರಿ ನಡೆದಿದ್ದಾನೆ’
ಗಾಂಧಿ ಶತಮಾನೋತ್ಸವದಲ್ಲಿ ಶಿವರುದ್ರಪ್ಪ ಬಂದಾಡುತ್ತಾರೆ. ಗಾಂಧಿ ಕತ್ತಲೆಯಲ್ಲಿ ಧಡಗುಟ್ಟಿ ಬರುವ ರೈಲಿನ ಹಾಗೆ, ಬಂದು ಹಾಗೇ ಕತ್ತಲಲ್ಲಿ ಲೀನವಾಗುವ ಹಾಗೆ ಎಂದಿದ್ದಾರಲ್ಲವೆ? ಸಾಲುಗಳು ನೆನಪಿಲ್ಲ. ಆದರೆ ಪ್ರತಿಮೆ ತಲೆಯಲ್ಲಿ ಸುಳಿದಾಡುತ್ತದೆ.
ಇಪ್ಪತ್ತನೆಯ ಶತಮಾನದ ಆದಿಭಾಗದಲ್ಲಿ ಆಸ್ಟ್ರೇಲಿಯಾದ ಆದಿನಿವಾಸಿಗಳು ಗಾಂಧಿಯ ಬಗ್ಗೆ ಚಿಂತಿಸಿದ್ದರಂತೆ. ಬ್ರಿಟೀಷರ ಎದುರು ಗಾಂಧಿಯ ಪ್ರತಿರೋಧ, ಚಳವಳಿಗಳು ತಮಗೂ ಮಾದರಿಯಾಗಬಲ್ಲವೆ ಎಂದು ಚರ್ಚಿಸಿದ್ದರಂತೆ. ಅದರ ಬಗ್ಗೆ ಇನ್ನಷ್ಟು ಓದಬೇಕು ಎಂದು ಮನಸ್ಸಿನ ಮೂಲೆಯಲ್ಲಿ ಒಂದು ಪುಟ್ಟ ಗುರುತು ಹಾಕಿಕೊಳ್ಳುತ್ತೇನೆ. ಅಂದಿಗೂ-ಇಂದಿಗೂ, ಅಲ್ಲಿಗೂ-ಇಲ್ಲಿಗೂ ಕೊಂಡಿ ಹುಡುಕುವುದು, ಅಂದಿಗೂ-ಇಂದಿಗೂ-ಅಲ್ಲಿಗೂ-ಇಲ್ಲಿಗೂ ಸಲ್ಲುವ ಒಂದು ದಾರಿ ಅನಿಸುತ್ತದೆ. ಅರವತ್ತರ ದಶಕದ ಅಬಾರಿಜಿನಗಳ “freedom ride”, ನಂತರ ಅವರಿಗೆ ಸಿಕ್ಕ ಓಟಿನ ಹಕ್ಕು, ಅಬಾರಿಜಿನಿ ಸಮುದಾಯದ ಬದುಕನ್ನು ಚೆನ್ನಾಯಿಸಿತೆ? ಗಾಂಧಿ ನಮಗಿಂದು ಎಷ್ಟು ದಕ್ಕುತ್ತಾರೆ? ದಕ್ಕಲೇಬೇಕೆ?
ಇನ್ನೂ ಮಂಜು ಚದುರಿಲ್ಲ. ಆದರೂ ಹಕ್ಕಿಗಳಿಗೆ “ಋತುಗಳ ರಾಜ ವಸಂತ” ಬರುತ್ತಿದ್ದಾನೆ ಎಂದು ಗೊತ್ತಾಗಿಬಿಟ್ಟಿದೆ. (ಯಾರದು-ಬಿಎಂಶ್ರಿ-ಅನುವಾದ?).
ಮರಿಹಕ್ಕಿಗಳು ಎಡೆಬಿಡದೆ ಚಿಲಿಪಿಲಿ ಅನ್ನುತ್ತಲೇ ಇವೆ.
ಎಲ್ಲಿಯ ಯಾವ ವಾಸನೆ ತಟ್ಟಿ ಎಬ್ಬಿಸಿದೆ ಅವನ್ನು?
ಭಾನುವಾರ ಆಗಸ್ಟ್ ೧೨, ಸಿಡ್ನಿಯ ಒಲಂಪಿಕ್ ಅಥ್ಲೆಟಿಕ್ ಸೆಂಟರ್ನಲ್ಲಿ ಇಂಡಿಯಾದ ಅರವತ್ತನೇ ವರ್ಷದ ಸ್ವಾತಂತ್ಯ್ರ ಉತ್ಸವ. ಇದು ಭಾರತದ ಹೊರಗೆ ನಡೆಯೋ ಸ್ವಾತಂತ್ಯ್ರ ಉತ್ಸವಗಳಲ್ಲಿ ಅತಿ ದೊಡ್ಡದಂತೆ. ಹತ್ತಾರು ಸಾವಿರ ಜನ ಇಂಡಿಯಾದವರು ಸೇರತಾರೆ.

ದಿನವಿಡೀ ಹಾಡು ಕುಣಿತ ಊಟ ತಿಂಡಿ ಜಾತ್ರೆ. ಇದರ ನಡುವೆ ಆಸ್ಟ್ರೇಲಿಯಾದ ಕೆಲವು ರಾಜಕಾರಣಿಗಳನ್ನ ಕರೆಸಿ ಬೆನ್ನು ತಟ್ಟಿಸಿಕೊಳ್ಳೋ ಬೇಜವಾಬ್ದಾರಿತನ ನಮ್ಮ ಸೂಟುಧಾರಿ ಇಂಡಿಯನ್ “ಎಂಟರ್ಪ್ರೆನರ್ಸ್”ಗಳಿಗೆ. ಹಲ್ಲುಗಿಂಜಿಕೊಂಡು ಅವರ ಜತೆ “ಸಭ್ಯತೆಯ ಲಂಚ್” ಬೇರೆ.

ಅವರೆಲ್ಲಾ ಭಾಷಣದ ಬೊಗಳೆ ಮುಗಿಸಿ “ಸಭ್ಯತೆಯ ಲಂಚ್”ಗೆ ತೊಲಗತ್ತಲೂ, ಕನ್ನಡದವರು ನಾವು ಕೆಲವರು “ಈ ಮಣ್ಣು ನಮ್ಮದು, ಈ ಗಾಳಿ ನಮ್ಮದು” ಅನ್ನೋ ದೊಡ್ಡರಂಗೇಗೌಡರ ಹಾಡು ಹಾಡಿದೆವು. (ಯಾವ ಮಣ್ಣು-ಯಾವ ಗಾಳಿ ಅಂತ ಗೊಂದಲ ಇದೆ ಬಿಡಿ!)
ಆಮೇಲೆ ಕನ್ನಡದ ಪುಟ್ಟ ಪುಟ್ಟ ಮಕ್ಕಳು ಹುರುಪಿನಿಂದ “ಚಲುವಯ್ಯ ಚಲವೋ” ಹಾಡಿಗೆ ಕುಣಿದರು.
ಅಲ್ಲದೆ, ತಮಿಳರು, ತೆಲುಗರು, ಹಿಂದಿಯವರು, ಪಂಜಾಬಿಗಳು, ಮಲಯಾಳಿಗಳು, ಮರಾಟಿಗರು, ಬಂಗಾಳಿಗಳು, ಎಲ್ರೂ ಅವರ ಅವರ ಹಾಡು ಹಾಕಿಕೊಂಡು/ಹೇಳಿಕೊಂಡು ಕುಣಿದರು.
ಇನ್ನೊಂದು ಕಡೆ ನಾವು ಸಿಕ್ಕ ಸಿಕ್ಕ ಕನ್ನಡದವರಿಗೆಲ್ಲಾ ಜೋಕುಮಾರಸ್ವಾಮಿ ಮತ್ತೆ ಆಡ್ತಾ ಇದ್ದೀವಿ ಬನ್ನಿ ಅಂತ ಹೇಳ್ಕೊಂಡು ತಿರುಗತಾ ಇದ್ದಿವಿ. ಆವಾಗ ಆಸ್ಟ್ರೇಲಿಯಾದ ಪ್ರಧಾನಿ ಜಾನ್ ಹವಾರ್ಡ್ ಅನ್ನೋ ಧೂರ್ತನ್ನ ಅವನ ಕ್ಷೇತ್ರದಲ್ಲೇ ಸೋಲಿಸೋ ಹಾಗೆ ಕಾಣೋ, ತನ್ನ ಟಿವಿ ಪ್ರೆಸೆಂಟರ್ ಕೆಲಸ ಬಿಟ್ಟು ಎಲೆಕ್ಷನ್ಗೆ ನಿಂತಿರೋ ದಿಟ್ಟ ಹೆಂಗಸು ಮಾಕ್ಸೀನ್ ಮೆಕ್ಯೂ ಬಂದು ನಮ್ಮ ಜತೆ ಮಾತಾಡಿದಳು. ಅವಳ ಬಗ್ಗೆ ನಮಗೆ ಸ್ವಲ್ಪ ಜಾಸ್ತೀನೆ ಪ್ರೀತಿ. ಮುಂದೆ ಅವಳಿಗೆ ಆ ಪ್ರೀತಿಯ ಭಾರ ಹೊರಕ್ಕಾಗದೇ ಇರಬಹುದು ಅನ್ನೋ ಎಚ್ಚರಿಕೇನೂ ಇದೆ. ಜೋಕುಮಾರಸ್ವಾಮಿ ನಾಟಕಕ್ಕೆ “ನೀನೂ ಬಾ, ನಿನ್ನ ಸಂಗಾತಿಗಳಿಗೂ ಹೇಳು” ಅಂತ ಚೀಟಿ ಕೊಟ್ಟು ಕರೆದವು. ಅವಳ ಹಿಂದೆ ಟೀವಿ ಕ್ಯಾಮೆರಾಗಳು ಇದ್ದವು. ಅವಳು ಯಾವುದಾದರೂ ಹಾಡು ಹೇಳಿ ಅಂದಳು. ತಕ್ಕೊ ಅಂತ “ಶರಣು ಹೇಳೇವ್ರಿ” ಹಾಡನ್ನು ಹಾಡಿದವು. ಅದು ಆವತ್ತು ಸಂಜೆ ಟೀವಿ ನ್ಯೂಸಲ್ಲೆಲ್ಲಾ ಮರುದಿನ ಪೇಪರಲ್ಲಿ ಬಂದದ್ದು ನೀವು ಇಲ್ಲಿ ನೋಡಬಹುದು.
ಎರಡು ತರ ಖುಷಿ ಇದೆ. ಎರಡೂ ಪ್ರಶ್ನೆಗಳಿಂದ ಹುಟ್ಟೋ ಖುಷಿ. ಪ್ರಶ್ನೆಗಳಲ್ಲೇ ನಿಂತು ಹೋಗೋ ಖುಷಿ. ಯಾಕೆಂದರೆ ಉತ್ತರದಲ್ಲಿ ವಿವರಣೆ ಇದೆ, ಆದರೆ ಖುಷಿ ಇಲ್ಲ. ಪ್ರಶ್ನೆಗಿಂತ ಉತ್ತರ ವಿಪರೀತ ಬೋರಿಂಗ್.
ಮೊದಲನೇ ಪ್ರಶ್ನೆ - ನೀನು ಈ ದೇಶದಲ್ಲೇ ಹುಟ್ಟಿದ್ದ? ಪ್ರಶ್ನೆ ಹಿಂದಿನ ಯೋಚನೆ ಗಮನಿಸಿ. ನುಡಿ, ನಡೆವಳಿಕೆ, ತಿಳವಳಿಕೆ ಇದೆಲ್ಲದರ ಮೇಲೆ ಅವರ ತೀರ್ಪು ಈ ಪ್ರಶ್ನೆ ರೂಪದಲ್ಲಿ ಧುತ್ತಂತ ಎದುರಾಗತ್ತೆ. ಈ ದೇಶದಲ್ಲಿ ಹುಟ್ಟದೇ ಇರೋನಿಗೆ ಅದು ರಾಜಕೀಯವಾದ ಪ್ರಶ್ನೆನೂ ಆಗಬಹುದು. ಉತ್ತರ ಕೊಡೋಕೆ ಇಷ್ಟ ಇಲ್ಲದೇ ಇರೋ ಪ್ರಶ್ನೆನೂ ಆಗಬಹುದು. ಅದೇನೇ ಆದರೂ ಈ ಪ್ರಶ್ನೆ, ಮತ್ತು ಉತ್ತರದ ಅಪೇಕ್ಷೆಯ ಸಂವಾದದಲ್ಲಿ ಒಂದು ಬಗೆಯ ಖುಷಿಯಿದೆ, ಮಜಾಯಿದೆ.
ಎರಡನೇದು - ನೀನು ಈ ದೇಶಕ್ಕೆ ಬಂದು ಎಷ್ಟು ದಿನ ಆಯಿತು? ಇದು “ನೀನು ಈ ದೇಶದಲ್ಲೇ ಹುಟ್ಟಿದ್ದ?” ಅನ್ನೋದಕ್ಕಿಂತ ಸಕ್ಕತ್ ಖುಷಿ ಕೊಡೋ ಪ್ರಶ್ನೆ. ಬೇಜಾನ್ ಒಳತಿರುವುಗಳಿರೋ ಪ್ರಶ್ನೆ. ಏಕ್ದಂ ಉತ್ತರಕೊಡೋ ಬದಲು ಪ್ರಶ್ನೆಗೊಂದು ಪ್ರಶ್ನೆ ಎಸೀಲಾ ಅಂತ ಇರಾದೆ ಹುಟ್ಟಿಕೊಳ್ಳತ್ತೆ. ಆ ಇರಾದೆ ತೋರಿಸಿಕೊಳ್ಳೋದು ಕುಚೋದ್ಯವಾಗಿ. “ದಿನಗಳಲ್ಲಿ ಬೇಕಾ ಗಂಟೆಗಳಲ್ಲಿ ಬೇಕಾ” ಅಂತ ಕೇಳೋದಕ್ಕೆ ಒಂದರೆ ಕ್ಷಣ ಯೋಚನೆ ಮಾಡ್ತೀನಿ. ಇದ್ದಕ್ಕಿದ್ದ ಹಾಗೆ ಅಷ್ಟೊಂದು ರಾಜಕೀಯ ಯಾಕೆ ಅಂತ ಮುಚ್ಕೋತೀನಿ. ಆದರೂ ನಾನು ಕಟ್ಟಿಕೊಂಡು ಬಂದಿದ್ದು ಇನ್ನೂ ಕಾಣತಲ್ಲ ಅಂತ ತಕತಕ ಕುಣೀತೀನಿ.
ಉತ್ತರ ಮಾತ್ರ ವಿಪರೀತ ಬೋರಿಂಗ್ ಅಂದೆ ಆಲ್ಲವ? ಏನಾದರೂ ಮಾಡಿ ಆಸಕ್ತಿ ಹುಟ್ಟಿಸಬೇಕು ಅಂತ ಶುರು ಮಾಡ್ತೀನಿ:
“ನಾನು ಎಲ್ಲಿ ಹುಟ್ಟಿದ್ದೋ ಗೊತ್ತಿಲ್ಲ. ಹಸುಳೆ ಆಗಿದ್ದಾಗ ಯಾರೋ ಧೂರ್ತ ರಾಜನ ಕಾಟ ತಡೆಯೋಕೆ ಆಗದೆ ನನ್ನ ಅಪ್ಪ-ಅಮ್ಮ ರಾತ್ರೋ ರಾತ್ರಿ ಪುಟ್ಟ ದೋಣೀಲಿ ತಪ್ಪಿಸಿಕೊಂಡರಂತೆ. ಅದು ಬಿರುಗಾಳಿಗೆ ಸಿಕ್ಕಿ ಮುಳುಗೋ ಹಾಗೆ ಆಗಿತ್ತಂತೆ. ಆವಾಗ ದೂರದಲ್ಲಿ ಒಂದು ಸುಭಿಕ್ಷ ದೇಶ ಕಾಣಿಸ್ತಂತೆ. ಆದರೆ ಹತ್ತಿರ ಹೋಗುತ್ತಲೂ, ಆ ದೇಶದ ದೊಡ್ಡ ಹಡಗು ನಮ್ಮ ದೋಣೀನ ಕಾಪಾಡೋದು ಬಿಟ್ಟು, ಅವರ ರಾಜನ ಅಪ್ಪಣೆ ಮೇರೆಗೆ, ದೊಡ್ಡ ಕೋಲಿಂದ ‘ಬರಬೇಡಿ ಹೋಗಿ’ ಅಂತ ದೂರಕ್ಕೆ ತಳ್ಳಿದರಂತೆ. ಆ ದೇಶದ ಹಡಗು ಅತ್ತಲಾಗಿ ಹೋಗುತ್ತಲೂ ನಮ್ಮ ದೋಣಿ ಮುಳುಗಿ ಹೋಯ್ತಂತೆ. ಅದಕ್ಕೆ ನನ್ನ ಅಪ್ಪ-ಅಮ್ಮನ ಮುಖ ನಾನು ನೋಡೇ ಇಲ್ಲ. ನಾನು ಸೊಳ್ಳೆ ಪರದೆ ಗಂಟಿನ ಮೇಲೆ ತೇಲಿಕೊಂಡು ಆ ಸುಭಿಕ್ಷ ನಾಡಿನ ಚಿನ್ನದಂಥ ಕಡಲತಡೀಲಿ ಯಾರದೋ ಕೈಗೆ ಸಿಕ್ಕನಂತೆ. ಅವರು ಮೊದಲು ಯಾವುದೋ ಪ್ರಾಣಿ ಅಂತ ನನ್ನನ್ನ ಮುಟ್ಟೋಕೂ ಹೆದರಿಕೊಂಡು ಆಮೇಲೆ ಮನಸ್ಸು ಬದಲಾಯಿಸಿ ಮನೆ ಒಳಗೆ ಇಟ್ಟಕೊಂಡು ಪ್ರೀತಿಯಿಂದ ಸಾಕಿದರಂತೆ. ಒಂದು ಚೂರು ದೊಡ್ಡೋನಾಗತಲೂ ಕಟ್ಟಿಹಾಕೋ ಅವರ ಪ್ರೀತಿಯಿಂದ ತಪ್ಪಿಸಿಕೊಂಡು ಮತ್ತೆ ನನ್ನ ನಾಡಿಗೆ ಓಡಿ ಹೋಗಿ ದೊಡ್ಡೋನಾದ ಮೇಲೆ ಈಗಷ್ಟೆ ಬಂದು ಇಲ್ಲಿ ಇಳಿದೆ.”
ನನ್ನ ತಲೆ ಸಾವಿರ ಹೋಳಾಗದೆ ಇರೋದು ಆಶ್ಚರ್ಯ ಅಲ್ಲ ಅಲ್ಲವೆ?
ಇದ್ದಕಿದ್ದ ಹಾಗೆ ಬಣ್ಣದ ಪಲ್ಯ ಮಾಡೋಣ ಅಂತ ಮನಸಾಯಿತು. ಬಾಣಲಿಯಲ್ಲಿ ಒಂದಷ್ಟು ಬಣ್ಣ ಉದುರಿಸಿ, ತಟಕ್ಕು ಎಣೆ ಹಾಕಿ ಹುರಿಯೋಕೆ ಶುರು ಮಾಡಿದೆ. ಹುರಿದಾಗ ಬಣ್ಣಗಳೆಲ್ಲಾ ಒಂದೇ ರೀತಿ ಆಗಲ್ಲ. ಒಂದೊಂದು ಬಣ್ಣ ಒಂದೊಂದು ರೂಪ ರಾದ್ಧಾಂತ ಮಾಡ್ಕೋತಾವೆ. ಕೆಲವು ಮುರುಟಿಕೊಂಡರೆ ಕೆಲವು ಅರಳಕೋತಾವೆ. ಕೆಲವು ಹರಡಿಕೊಂಡರೆ ಇನ್ನು ಕೆಲವು ಸುರಟಿಕೋತಾವೆ. ಒಟ್ಟಿನಲ್ಲಿ ಏನೋ ಒಂದು ಹದ ಅಂತೂ ಇರತ್ತೆ. ಮುರುಟಿಕೊಂಡಿದ್ದು ಅರಳಿಕೊಂಡಿದ್ದು ಪಕ್ಕಪಕ್ಕದಲ್ಲಿ ಬಿದ್ದುಕೊಂಡು ಕಷ್ಟಸುಖ ಮಾತಾಡಿಕೋತಾ ಇರೋದು ನೋಡೋಕೆ ತುಂಬಾ ಚೆನ್ನಾಗಿರತ್ತೆ. ಕೆಲವು ಬಣ್ಣಗಳು ಬದಲಾಗ್ತಾ ಬಿಳಿಯಾಗ್ತಾವೆ, ಇನ್ನು ಕೆಲವು ಕಪ್ಪಾಗ್ತಾವೆ. ಆದರೆ ಮಜಕೊಡೋದು ಯಾವುದು ಗೊತ್ತಾ? ಹುರೀತಾ ಹುರೀತಾ ದಟ್ಟವಾಗ್ತಾ ಹೋಗವು.
ಆದರೂ ಬಾಣಲಿಯ ಬಣ್ಣದ ಪಲ್ಯದಲ್ಲಿ ಯಾಕೋ ಏನೋ ಸರಿಯಿಲ್ಲ ಅನ್ನಿಸಿ ಏನಿರಬಹುದು ಅಂತ ಯೋಚಿಸ್ತಾ ಬಾಣಲೀನ ದಿಟ್ಟಿಸ್ತಾ ಹುರೀತಿದ್ದೆ. ಇನ್ನು ಹೆಚ್ಚು ಹುರಿದರೆ ಕೆಟ್ಟು ಹೋಗತ್ತೆ ಅಂತ ಬೇರೆ ಚಿಂತೆ ಹತ್ತಿಕೋತು. ಹುರಿಯೋದು ಸಾಕು ಅನ್ನಿಸಿದರೂ ಇನ್ನೇನೋ ಒಂದು ಬಣ್ಣ ಕಡಿಮೆ ಆಗಿದೆ ಅಂತ ಒಳಗೊಳಗೇ ಒದ್ದಾಡ್ತಿದ್ದೆ. ನೀಲಿ ಇರಬಹುದ ಅಂತ ಹೊರಗಿನ ಆಕಾಶ ನೋಡಿದೆ. ಹಸಿರು ಇರಬಹುದ ಅಂತ ದೂರದ ಹುಲ್ಲುಗಾವಲು ನೋಡಿದೆ. ಕೆಂಪು ಇರಬಹುದಾ ಅಂತ ಉರೀತಿದ್ದ ಸೂರ್ಯನ್ನ ನೋಡಿದೆ. ಹಳದಿ ಇರಬಹುದ ಅಂತ ಉದುರಿ ಕೊಳೀತಿದ್ದ ಎಲೆಗಳ ರಾಶೀನ ನೋಡಿದೆ. ಇಷ್ಟೆಲ್ಲಾ ಮೇಲೆ ಕೆಳಗೆ, ಒಳಗೆ ಹೊರಗೆ ನೋಡ್ತಾ ನೋಡ್ತಾ ಆನಂದವಾಗಿರೋವಾಗ ಬಾಣಲಿ ಒಳಗಿದ್ದ ಬಣ್ಣಗಳು ತಮ್ಮನ್ನು ತಾವೇ ಮರೆತು ಒಂದೇ ಬಿಳಿ ಇಲ್ಲ ಕಪ್ಪು ಆಗಿ ನನ್ನನ್ನೇ ಮಿಕಮಿಕ ನೋಡ್ತಿದ್ವು. ಅದಕ್ಕೇ ಒಗ್ಗರಣೆ ಹಾಕಿ ಹೊಡದು ಬಿಡೋಣ ಅಂತ ಆಸೆ ಆದರೂ, ಮಾಡೋಕೆ ಹೊರಟಿದ್ದು ಇದು ಅಲ್ವಲ್ಲ ಅಂತ ತಬ್ಬಿಬ್ಬಾಗಿ ನಿಂತೆ.
ಇದು ನಡೆದು ಎಷ್ಟೋ ವರ್ಷ ಆಗಿದ್ದರೂ ಈವತ್ತಿಗೂ ಸರಿಯಾದ ಬಣ್ಣ ಬಳಸದೇ ಮಾಡಿದ ಪಲ್ಯ ಗಂಟಲಲ್ಲಿ ಇಳಿಯೋಲ್ಲ. ಹಾಗೇನೆ ಕಪ್ಪೋ ಬಿಳಿಯೋ ಆಗಿಬಿಟ್ಟ ಪಲ್ಯ ಕಂಡರೆ ಮೈ ಝುಮ್ಮನ್ನತೆ.
ಎಷ್ಟೋ ಜನ ಕಿವಿನಲ್ಲಿ ಪಿಸುಗುಟ್ಟಿದ್ದಾರೆ- ಯಾಕೆ ಸುಮ್ಮನೆ ಬಣ್ಣದ ಬಗ್ಗೆ ತಲೆ ಕೆಡಿಸ್ಕೋತೀಯ, ಕಪ್ಪೋ ಬಿಳೀನೋ ಮೂಡಿಗೆ ಸರಿಯಾಗಿ ಯಾವುದು ಹೊಂದತ್ತೋ ತಿಂದು ಬಿಡು, ಬಂದವರಿಗೆ ಬಡಿಸಿಬಿಡು ಅಂತ.
ನಾನೂ ಅವರ ಕಿವಿನಲ್ಲಿ ಪಿಸುಗುಡಿತೀನಿ- ಬಣ್ಣ ಒತ್ತು ಕಳಕೊಂಡು ಬಣ ಕಟ್ಟಿಕೊಂಡರೆ ಎಲ್ಲ ಬಣಬಣ ಅಂತ.
ಅವರು ಉಂಡಿದ್ದು ಉಗುಳೋದೋ ಬೇಡವೋ ಅಂತ ಮುಖಮುಖ ನೋಡತಾರೆ.
ಬರ್ಗ್ಮನ್ ತೀರಿಕೊಂಡ ಸುದ್ದಿ ಕೇಳಿ ಅವನ ವಿಂಟರ್ಲೈಟ್ ಮತ್ತೆ ನೋಡಿದೆ. ೮೧ ನಿಮಿಷದ ಅವಧಿಯ ಚಿತ್ರ. ವಾಸ್ತವ ಜಗತ್ತಿನ ಮೂರು ಗಂಟೆಗಳಲ್ಲಿ ತೆರೆದುಕೊಳ್ಳುವ ಪಾತ್ರಗಳು, ಮಾನಸಿಕ ಹೊಯ್ದಾಟ, ಧಾರ್ಮಿಕವಲ್ಲದ ಧರ್ಮದ ಬಗೆಗಿನ ಚಿಂತನೆ, ನೋವು ಮತ್ತು ನರಳಾಟದ ಬಗೆಗಿನ ಒಳನೋಟ ನಮ್ಮನ್ನು ಹಿಡಿದಿಡುತ್ತದೆ.

ನಾಕು ವರ್ಷದ ಹಿಂದೆ ಹೆಂಡತಿ ಕಳೆದುಕೊಂಡ ಸಣ್ಣ ಊರೊಂದರ ಪಾದ್ರಿ. ತನ್ನನ್ನು ಮದುವೆಯಾಗೆಂದು ಪೀಡಿಸುವ ಶಾಲಾ ಶಿಕ್ಷಕಿಯಾದ ಅವನ ಗೆಳತಿ. ಜಗತ್ತಿನ ಕರಾಳ ವಿದ್ಯಮಾನಗಳ ಬಗ್ಗೆ ಕಂಗೆಟ್ಟಿರುವ ಸೈನಿಕ ಮತ್ತು ಅವನ ಬಸುರಿ ಹೆಂಡತಿ. ಬೆನ್ನು ನೋವಿಂದ ನರಳುವ, ನಿದ್ದೆ ಬಾರದೆ, ಸದಾ ಮದ್ದಿನ ಮೇಲೆ ಬದುಕಿರುವ ಗೂನು ಬೆನ್ನಿನ ಚರ್ಚಿನ ಸಹಾಯಕ. ಹಗುರ ಮನೋಭಾವದ ಚರ್ಚಿನ ಪಿಯಾನೋ ವಾದಕ. ಇಷ್ಟೇ ವಿಂಟರ್ಲೈಟ್ ಚಿತ್ರದ ಜಗತ್ತಿನ ಪಾತ್ರಗಳು.
ಹಿಮ ಮುಚ್ಚಿದ ಚಳಿಗಾಲದ ಒಂದು ಮಧ್ಯಾಹ್ನ-ಸಂಜೆ ನಡುವಿನ ಹೊತ್ತು. ತನ್ನ ಚರ್ಚಿನ ಸೇವೆ ಮುಗಿಸುವಲ್ಲಿಂದ ಮೂರು ಗಂಟೆಯ ನಂತರವಿರುವ ಇನ್ನೊಂದು ಚರ್ಚಿನ ಸೇವೆಯ ನಡುವೆ ನಡೆಯುವ ಘಟನೆಗಳು ಈ ಚಿತ್ರದ ಬಿತ್ತರ.
ಸಣ್ಣ ಅನಾರೋಗ್ಯದಿಂದ ಬಳಲುತ್ತಿರುವ ಪಾದ್ರಿಗೆ ಗೆಳತಿಯ ಪತ್ರ ಓದಲು ಬಿಡುವಿಲ್ಲ. ಆಗ ಮಾತನ್ನೇ ಆಡದ ಸೈನಿಕ ಮತ್ತು ಅವನ ಆಂತರಿಕ ಹಿಂಸೆಯನ್ನು ಹೋಗಲಾಡಿಸಲು ಹವಣಿಸುತ್ತಿರುವ ಅವನ ಹೆಂಡತಿ ಪಾದ್ರಿಯನ್ನು ಭೇಟಿಮಾಡುತ್ತಾರೆ. ತನ್ನ ಗಂಡನೊಡನೆ ಮಾತಾಡಿ ಅವನ ವೇದನೆಯನ್ನು ಕಡಿಮೆ ಮಾಡಬೇಕೆಂದು ಸೈನಿಕನ ಬಸುರಿ ಹೆಂಡತಿ ಕೇಳಿಕೊಳ್ಳುತ್ತಾಳೆ. ಪಾದ್ರಿ ಒಂದು ಗಂಟೆ ಬಿಟ್ಟು ಬರುವಂತೆ ಹೇಳುತ್ತಾನೆ.

ಆ ಒಂದು ಗಂಟೆಯಲ್ಲಿ ಗೆಳತಿಯ ಪತ್ರ ಓದುತ್ತಾನೆ. ನಂತರ ಬಂದ ಸೈನಿಕನಿಗೆ ಸಾಂತ್ವನ ಹೇಳಬೇಕಾದವನು ತನ್ನ ಒಳಗನ್ನು ಅವನ ಮುಂದೆ ಸುರಿದುಕೊಳ್ಳುತ್ತಾನೆ. ಮದುವೆಯಾಗೆಂದು ಈ ಹಿಂದೆ ಪೀಡಿಸುತ್ತಿದ್ದ ಗೆಳತಿ ಅವಳ ಶಾಲೆಯ ಕೋಣೆಯಲ್ಲಿ ಪಾದ್ರಿಗೆ ಮುಖಾಮುಖಿಯಾಗುತ್ತಾಳೆ. ಪಾದ್ರಿ ಅವಳನ್ನು ತಾನೇಕೆ ಮದುವೆಯಾಗಲಾರೆ ಎಂದು ಹೇಳಿಕೊಳ್ಳುತ್ತಾನೆ. ಅವಳ ಸ್ವಭಾವವನ್ನು ಎತ್ತಾಡಿ ಹಳಿಯುತ್ತಾನೆ. ಅಷ್







